
ದೆಹಲಿ: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತುರ್ತು ಸಭೆ ನಡೆಸಿದ್ದಾರೆ. ಸಿಬಿಐ ತನಿಖೆ ಚುರುಕುಗೊಂಡಿದ್ದು, ಎನ್ಟಿಎ ಒಳಗಿನವರ ಪಾತ್ರದ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ. ರದ್ದಾದ ನೀಟ್ ಪರೀಕ್ಷೆಯನ್ನು ಇದೀಗ ಜೂನ್ 21 ರಂದು ಮರುನಡೆಸಲು ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಎನ್ಟಿಎ ಮಹಾನಿರ್ದೇಶಕರು ಮತ್ತು ಸಿಬಿಎಸ್ಇ ಅಧ್ಯಕ್ಷರ ಉಪಸ್ಥಿತಿಯಲ್ಲಿ ಪರೀಕ್ಷೆ ಮರುನಡೆಸುವ ಸಿದ್ಧತೆಗಳು ಹಾಗೂ ಮುಂದಿನ ದಿನಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹಲವರನ್ನು ಬಂಧಿಸಿದ್ದು, ಇದು ಸಂಘಟಿತ ಜಾಲದ ಕೃತ್ಯ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.
ರಾಜಸ್ಥಾನದ ಕೋಚಿಂಗ್ ಕೇಂದ್ರಗಳಿಗೆ ಸೋರಿಕೆಯಾದ ಪ್ರಶ್ನೆಪತ್ರಿಕೆ ತಲುಪಿದ್ದು, ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ವಸೂಲಿ ಮಾಡಲಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಇದೇ ವೇಳೆ ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಎನ್ಟಿಎ ರದ್ದುಪಡಿಸಿ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಗಿದೆ. ನೀಟ್ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತವಾಗಿ ನಡೆಸುವಂತೆ ವೈದ್ಯರ ಸಂಘಟನೆಗಳೂ ಕೇಂದ್ರಕ್ಕೆ ಮನವಿ ಮಾಡಿವೆ.























