
ಉಡುಪಿ: ನ. 8 ರಿಂದ ಡಿ. 7ರವರೆಗೆ ಪರ್ಯಾಯ ಪುತ್ತಿಗೆ ಶ್ರೀ ಮಠದ ವತಿಯಿಂದ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ‘ಬೃಹತ್ ಗೀತೋತ್ಸವ’ ಧಾರ್ಮಿಕ ವೈಭವ ನಡೆಯಲಿದೆ.
ನವೆಂಬರ್ 28ರಂದು 10 ಗಂಟೆಗೆ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಒಂದು ಲಕ್ಷ ಮಂದಿ ಭಕ್ತರಿಂದ ಲಕ್ಷ ಕಂಠ ಗೀತಾ ಪಾರಾಯಣ ನಡೆಯಲಿದ್ದು ಆ ದಿನ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗಿ ಗೀತಾ ಶ್ಲೋಕಗಳನ್ನು ಪಾರಾಯಣ ಮಾಡಿ ಭಕ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಎಲ್ಲಾ ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ಇಂದು ಗೀತಾ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಪ್ರಧಾನಿ ಮೋದಿ ಮಧ್ಯಾಹ್ನ ಮಠಕ್ಕೆ ಆಗಮಿಸಿ, ಶ್ರೀ ಕೃಷ್ಣ-ಮುಖ್ಯ ಪ್ರಾಣ ದೇವರ ದರ್ಶನ ಪಡೆದ ಬಳಿಕ ಸುವರ್ಣ ತೀರ್ಥ ಮಂಟಪ ಮತ್ತು ಕನಕನ ಕಿಂಡಿಯ ಕನಕ ಕವಚ ಲೋಕಾರ್ಪಣೆಗೊಳಿಸಿ ಪ್ರಸಾದ ಭೋಜನ ಸ್ವೀಕರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಲ್ಲದೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್, ಕೇಂದ್ರ ಸಚಿವ ಪ್ರಹಲ್ಲಾದ್ ಜೋಶಿ, ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಕೂಡ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.






