
ನವದೆಹೆಲಿ: 2026ರ ಪಂಚರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು ಪಶ್ಚಿಮ ಬಂಗಾಳ ಸೇರಿದಂತೆ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬೆಳಗ್ಗೆ 8 ಗಂಟೆಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, 8:30ರಿಂದ ಇವಿಎಂ ಮತಗಳ ಎಣಿಕೆ ನಡೆಯಲಿದೆ. ಬೆಳಗ್ಗೆ 10ರೊಳಗೆ ಪ್ರಾಥಮಿಕ ಮುನ್ನಡೆಗಳು ಸ್ಪಷ್ಟವಾಗುವ ನಿರೀಕ್ಷೆ ಇದೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನಾಲ್ಕನೇ ಬಾರಿ ಅಧಿಕಾರ ಉಳಿಸಿಕೊಳ್ಳಲು ಪೈಪೋಟಿ ನಡೆಸುತ್ತಿದ್ದಾರೆ. ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಕಠಿಣ ಸ್ಪರ್ಧೆ ಇದೆ ಎಂದು ಎಕ್ಸಿಟ್ ಪೋಲ್ ಸೂಚಿಸಿದ್ದು, ಶೇ.93ಕ್ಕೂ ಅಧಿಕ ಮತದಾನ ಕುತೂಹಲ ಹೆಚ್ಚಿಸಿದೆ.
ತಮಿಳುನಾಡಿನಲ್ಲಿ ನಟ ವಿಜಯ ಅವರ ‘ತಮಿಳಗ ವೆಟ್ರಿ ಕಳಗಂ’ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಡಿಎಂಕೆ ಮುನ್ನಡೆಯಲ್ಲಿದೆ ಎನ್ನಲಾಗುತ್ತಿದ್ದರೂ, ವಿಜಯ ಅವರ ಮತಗಳ ಪ್ರಭಾವ ಯಾರಿಗೆ ಲಾಭ ಎನ್ನುವುದು ಇನ್ನೂ ಅನುಮಾನದಲ್ಲಿದೆ.
ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಡಪಕ್ಷಗಳಿಗೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸವಾಲು ನೀಡಿದೆ. ಅಸ್ಸಾಂನಲ್ಲಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸದಲ್ಲಿದೆ. ಕಾಂಗ್ರೆಸ್ ಅಹೋಮ್ ಸಮುದಾಯದ ಮತಗಳನ್ನು ಸೆಳೆಯಲು ತಂತ್ರ ರೂಪಿಸಿದೆ.
ಉಪಚುನಾವಣೆಗಳತ್ತವೂ ಗಮನ ಸೆಳೆಯಲಾಗಿದೆ. ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಸೇರಿದಂತೆ 7 ಕ್ಷೇತ್ರಗಳ ಫಲಿತಾಂಶ ಇಂದು ಹೊರಬೀಳಲಿದ್ದು, ರಾಜ್ಯ ರಾಜಕೀಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.



















