ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ : ಹೈಕೋರ್ಟ್

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ಪ್ರೀತಿ, ಮದುವೆಯ ಭರವಸೆ ಮತ್ತು ದೈಹಿಕ ಸಂಬಂಧದ ಹೆಸರಿನಲ್ಲಿ ಯುವತಿಯನ್ನು ವಂಚಿಸಿದ ಪ್ರಕರಣದಲ್ಲಿ ಹೊಸ ಬೆಳವಣಿಗೆಗಳು ಕಂಡುಬಂದಿವೆ. ಮದುವೆಯ ಮಾತು ನೀಡಿ ಸಂಬಂಧ ಬೆಳೆಸಿ, ನಂತರ ಗರ್ಭಿಣಿಯಾಗಿಸಿದ ಬಳಿಕ ಮದುವೆಗೆ ನಿರಾಕರಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.
ದೂರು ಪ್ರಕಾರ, ಇಬ್ಬರ ನಡುವೆ ಸುಮಾರು ಏಳು ವರ್ಷಗಳ ಪ್ರೀತಿಯ ಸಂಬಂಧ ಇತ್ತು. ಈ ಅವಧಿಯಲ್ಲಿ ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಹೊಂದಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಬಳಿಕ ಮಗುವಿಗೆ ಜನ್ಮ ನೀಡಿದ ನಂತರ ಆರೋಪಿ ಮದುವೆಯಿಂದ ಹಿಂದೆ ಸರಿದಿದ್ದಾನೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಕೃಷ್ಣ ಜೆ. ರಾವ್ ಹೈಕೋರ್ಟ್ ಮೊರೆ ಹೋಗಿದ್ದು ಆತನ ಪರ ವಕೀಲರು, ಇದು ಪರಸ್ಪರ ಒಪ್ಪಿಗೆಯ ಸಂಬಂಧವಾಗಿದ್ದು, ರಾಜಕೀಯ ಉದ್ದೇಶದಿಂದ ಪ್ರಕರಣವನ್ನು ಹೆಚ್ಚಾಗಿ ತೋರಿಸಲಾಗುತ್ತಿದೆ ಎಂದು ವಾದಿಸಿದ್ದಾರೆ.
ವಿಚಾರಣೆ ವೇಳೆ ನ್ಯಾಯಾಲಯ, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಯುವತಿ, ಮಗುವನ್ನು ಅನಾಥವನ್ನಾಗಿಸದೆ ಮದುವೆಯಾಗುವುದೇ ಉತ್ತಮ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿ ಕರ್ತವ್ಯ. ಯುವತಿಗೆ ಮಾಸಿಕ 10 ಸಾವಿರ ಜೀವನಾಂಶ ನೀಡಲು ಸಿದ್ದರಿದ್ದಾರಾ ? ಎಂದು ಆರೋಪಿ ಪರ ವಕೀಲರಿಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಪ್ರಶ್ನೆ ಮಾಡಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಲಾಗಿದೆ.













