
ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪರಿಣಾಮದಿಂದಾಗಿ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ನಿಷೇಧ ಹೇರಲಾಗಿದೆ.
ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಿಮಲ, ಪುಲ್ಲುಮೇಡು ದಾರಿಯನ್ನು ರದ್ದುಗೊಳಿಸಿ ಕಾಲ್ನಡಿಗೆ ಯಾತ್ರಿಕರು ನೀಲಕ್ಕಲ್-ಪಂಬಾ ಮೂಲಕ ಶಬರಿಮಲೆಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಅರಣ್ಯ ಮಾರ್ಗದ ಮೂಲಕ ಆಗಮಿಸಿದ್ದ ಭಕ್ತರನ್ನು ವಿಶೇಷ ಕೆಎಸ್ಆರ್ಟಿಸಿ ಬಸ್ ಮೂಲಕ ಪಂಪಾಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ.
ಈಗಾಗಲೇ ಭಾರೀ ಮಳೆಯ ಹಿನ್ನೆಲೆ ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿ ಪ್ರವಾಹ ಉಂಟಾಗುವ ಪ್ರದೇಶದಲ್ಲಿ ನೆಲೆಸಿರುವವರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.



















