
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಇಂದು ಸಂಜೆ 4 ಗಂಟೆಗೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಸಿಎಂ ಹೆಸರನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.
ಈಗಾಗಲೇ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಮಾಹಿತಿ ಪಕ್ಷದ ವಲಯಗಳಲ್ಲಿ ಹರಿದಾಡುತ್ತಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ಇದಕ್ಕೆ ಅಧಿಕೃತ ಮುದ್ರೆ ಬೀಳಲಿದೆ. ಬುಧವಾರ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಯಿದೆ.
ತೈಲ ಬೆಲೆ ಏರಿಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸರಳ ಸಮಾರಂಭದ ಮೂಲಕ ಅಧಿಕಾರ ಸ್ವೀಕರಿಸಲು ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಕಾರ್ಯಕರ್ತರನ್ನು ಬೆಂಗಳೂರಿಗೆ ಕರೆಸುವ ಯೋಜನೆಯನ್ನು ಕೈಬಿಡಲಾಗಿದ್ದು, ಬಳಿಕ ಜಿಲ್ಲಾವಾರು ಪ್ರವಾಸದ ಮೂಲಕ ಜನರಿಗೆ ಧನ್ಯವಾದ ಸಲ್ಲಿಸಲು ಅವರು ಉದ್ದೇಶಿಸಿದ್ದಾರೆ.
ಇನ್ನೊಂದೆಡೆ, ಸದಾಶಿವನಗರದ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಚಿವಾಕಾಂಕ್ಷಿಗಳು, ಶಾಸಕರು ಹಾಗೂ ಹಿರಿಯ ನಾಯಕರು ನಿರಂತರವಾಗಿ ಭೇಟಿ ನೀಡುತ್ತಿದ್ದು, ಹೊಸ ಸಚಿವ ಸಂಪುಟದ ರಚನೆ ಕುರಿತು ಚರ್ಚೆಗಳು ಜೋರಾಗಿವೆ.




























