
ದಾವಣಗೆರೆ: ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ಈ ಘಟನೆ ಸಂಬಂಧ ಚರ್ಚಿಸಲು ಸೋಮವಾರ ನಾನು ಅಧಿಕಾರಿಗಳ ಸಭೆ ಕರೆದಿದ್ದೇನೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಘಟನೆ ಹಿನ್ನೆಲೆ:
ಶಂಕಿತ ಐಸಿಸ್ ಉಗ್ರ, ವಿಕೃತ ಕಾಮಿ ಉಮೇಶ್ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನೊಳಗೆ ಮೊಬೈಲ್ ಬಳಸುತ್ತಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿ ಭಾರೀ ಸಂಚಲನ ಸೃಷ್ಟಿಸಿವೆ. ಭಾನುವಾರ ಮತ್ತೊಂದು ವಿಡಿಯೋ ಹೊರಬಂದಿದ್ದು, ಅದರ ಬಗ್ಗೆಯೂ ಚರ್ಚೆ ಮುಂದುವರೆದಿದೆ.






























































































































