
ಬೆಂಗಳೂರಿನಲ್ಲಿ ಭಾರಿ ಮಳೆಯ ಅಬ್ಬರಕ್ಕೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಬಳಿ ದುರ್ಘಟನೆ ಸಂಭವಿಸಿದೆ. ಎಮರ್ಜೆನ್ಸಿ ವಿಭಾಗದ ಸಮೀಪದ ಕಂಪೌಂಡ್ ಗೋಡೆ ಕುಸಿದು ಮೂರು ಮಕ್ಕಳು ಸೇರಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ನಗರದಾದ್ಯಂತ ಬುಧವಾರ ಸಂಜೆ ಗಾಳಿ ಸಹಿತ ಸುರಿದ ಮಳೆಯಿಂದ ತಪ್ಪಿಸಿಕೊಳ್ಳಲು ಜನರು ಮತ್ತು ಬೀದಿ ವ್ಯಾಪಾರಿಗಳು ಗೋಡೆಯ ಪಕ್ಕದ ಶೆಡ್ ಕೆಳಗೆ ಆಶ್ರಯ ಪಡೆದಿದ್ದರು. ಆದರೆ ಹಳೆಯ ಗೋಡೆ ಅಚಾನಕ್ ಕುಸಿದು ಬಿದ್ದು ಅವರು ಅವಶೇಷಗಳಡಿ ಸಿಲುಕಿದರು.
ಘಟನೆ ಬಳಿಕ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಸಿಲುಕಿದವರನ್ನು ಹೊರತೆಗೆದರು. ಏಳು ಮಂದಿ ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಶಾಂತಿನಗರ ಸೇರಿದಂತೆ ಹಲವೆಡೆ ಮಳೆಯಿಂದ ರಸ್ತೆಗಳು ಜಲಾವೃತಗೊಂಡು ಸಂಚಾರ ಅಸ್ತವ್ಯಸ್ತವಾಯಿತು. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸುವುದಾಗಿ ತಿಳಿಸಿ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸೂಚನೆ ನೀಡಿದ್ದಾರೆ.






















































































