
ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಸಚಿವ ಎಚ್.ಸಿ ಮಹಾದೇವಪ್ಪ ಅವರು ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಿಕ್ಷಾಟನೆ ಸಮಸ್ಯೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸದಸ್ಯ ಕೆ. ಗೋವಿಂದರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರು ಒಂದು ಪಾರಂಪರಿಕ ನಗರವಾಗಿದ್ದು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ ಎಂದರು. ಜೊತೆಗೆ ಕೈಗಾರಿಕೆಗಳ ಬೆಳವಣಿಗೆಯಿಂದ ಉದ್ಯೋಗಕ್ಕಾಗಿ ವಿವಿಧ ರಾಜ್ಯಗಳಿಂದ ಜನರು ಬರುತ್ತಿದ್ದಾರೆ. ಆದರೆ ಕೆಲವರಿಗೆ ಉದ್ಯೋಗ ಸಿಗದೆ ಭಿಕ್ಷಾಟನೆಗೆ ತೊಡಗುತ್ತಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಇದಲ್ಲದೆ ಭಿಕ್ಷಾಟನೆ ಕೆಲವೆಡೆ ಮಾಫಿಯಾ ಚಟುವಟಿಕೆಯಾಗುತ್ತಿರುವ ಬಗ್ಗೆ ಮಾಹಿತಿಯೂ ದೊರಕಿದೆ. ಈ ಹಿನ್ನೆಲೆ ನಗರ ಪೊಲೀಸ್ ಆಯುಕ್ತರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಭಿಕ್ಷುಕರ ಪುನರ್ವಸತಿಗಾಗಿ ಸರ್ಕಾರ ಫೆಬ್ರವರಿ 26ರ ತನಕ ₹69.07 ಕೋಟಿ ವೆಚ್ಚ ಮಾಡಿದೆ. ರಾಜ್ಯದ 15 ನಿರಾಶ್ರಿತ ಪರಿಹಾರ ಕೇಂದ್ರಗಳ ಮೂಲಕ 796 ಪುರುಷರು ಮತ್ತು 230 ಮಹಿಳೆಯರು ಸೇರಿ ಒಟ್ಟು 1,026 ಮಂದಿಯನ್ನು ಗುರುತಿಸಿ, ಅವರ ಕುಟುಂಬಗಳನ್ನು ಪತ್ತೆಹಚ್ಚಿ ಮನೆಗೆ ಕಳುಹಿಸಲಾಗಿದೆ.


ನಿರಾಶ್ರಿತರ ಕಲ್ಯಾಣಕ್ಕಾಗಿ ಮಾನಸಿಕ ಆರೋಗ್ಯ ಕೇಂದ್ರ, ಬಿ. ಆರ್. ಅಂಬೇಡ್ಕರ್ ಅವರ ಹೆಸರಿನ ತರಬೇತಿ ಕೇಂದ್ರ ಹಾಗೂ ಸಿದ್ಧ ಉಡುಪು ಉತ್ಪಾದನಾ ಘಟಕ ಸ್ಥಾಪಿಸಲು ಕೇಂದ್ರ ಪರಿಹಾರ ಸಮಿತಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.







