
ಬೆಂಗಳೂರು: ರಾಜ್ಯ ಸರ್ಕಾರವು ಮಲ್ಟಿಪ್ಲೆಕ್ಸ್ ಥಿಯೇಟರ್ಗಳಲ್ಲಿ ನಡೆಯುತ್ತಿದ್ದ ಲೂಟಿಗೆ ಕಡಿವಾಣ ಹಾಕಲು ನಿರ್ಧರಿಸಿದ್ದು ಹೀಗಾಗಿ ಇನ್ನು ಮುಂದೆ ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ ಮಾಡಿ ಅಧಿಸೂಚನೆ ಹೊರಡಿಸಿದೆ.
ರಾಜ್ಯದ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿಗಳಲ್ಲಿ, ಎಲ್ಲಾ ಭಾಷೆಯ ಚಿತ್ರಗಳಿಗೆ ಹಾಗೂ ಎಲ್ಲಾ ಪ್ರದರ್ಶನಕ್ಕೆ ಎಲ್ಲಾ ರೀತಿಯ ತೆರಿಗೆ ಹೊರತುಪಡಿಸಿ ಟಿಕೆಟ್ ದರ 200 ರೂ. ಮೀರದಂತೆ ಆದೇಶದಲ್ಲಿ ತಿಳಿಸಿದ್ದು ಆದರೆ 75 ಆಸನಗಳು ಅಥವಾ ಅದಕ್ಕಿಂತ ಕಡಿಮೆ ಆಸನಗಳ ಪ್ರಿಮಿಯಂ ಸೌಲಭ್ಯವಿರುವ ಬಹುಪರದೆ ಚಿತ್ರ ಮಂದಿರಗಳನ್ನು ಈ ದರ ಮಿತಿಯಿಂದ ಹೊರಗಿಟ್ಟಿದೆ.
ಜನ ಮತ್ತು ಸಿನಿಮಾ ಕಲಾವಿದರು ಒಂದೊಂದು ಮಾಲ್ ನಲ್ಲಿ ಬೇರೆ ಬೇರೆ ರೀತಿಯ ದರವಿದ್ದು ಹೀಗಾಗಿ ಟಿಕೆಟ್ ದರವನ್ನು ಕಡಿಮೆ ಮಾಡಿ ಏಕರೂಪದ ದರವನ್ನು ತರಬೇಕು ಎಂದು ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ ಕಳೆದ ವರ್ಷ ಆಂದೋಲನ ನಡೆಸಿದ್ದರು. ಒತ್ತಡ ಜಾಸ್ತಿಯಾಗುತ್ತಿದ್ದಂತೆ ಸರ್ಕಾರ ಈ ಸಮಸ್ಯೆಯ ಬಗ್ಗೆ ಅಧ್ಯಯನ ನಡೆಸಲು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ನೇತೃತ್ವದಲ್ಲಿ ಗಿರೀಶ್ ಕಾಸರವಳ್ಳಿ, ಭಾರತಿ ವಿಷ್ಣುವರ್ಧನ್, ರಾಘವೇಂದ್ರ ರಾಜ್ಕುಮಾರ್, ರಾಕ್ಲೈನ್ ವೆಂಕಟೇಶ್, ಭಾಷಾ, ಜಯಮಾಲ, ಥಾಮಸ್ ಡಿಸೋಜಾ, ಕೆ ವಿ ಚಂದ್ರಶೇಖರ್ ಮತ್ತು ಗಂಗಾಧರ್ ಮೊದಲಿಯಾರ್ ಅವರುಗಳನ್ನು ಒಳಗೊಂಡ 17 ಜನರ ಸದಸ್ಯರ ಸಮಿತಿಯೊಂದನ್ನು ರಚಿಸಿ ಇದೀಗ ಏಕರೂಪ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊಡಿಸಿದೆ.













