
ಮುದ್ರಾಡಿ,: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಹೆಬ್ರಿ ತಾಲೂಕು ವತಿಯಿಂದ ಮುದ್ರಾಡಿ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಗುರುವಾರ “ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ” ನಡೆಯಿತು.
ಹಿರಿಯ ಸಮಾಜಸೇವಕರಾದ ಗಣಪತಿ ಎಂ.ಅವರು ಹಣ್ಣಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಗಣ್ಯರು ಸೇರಿ ಹಣ್ಣಿನ ಗಿಡಗಳನ್ನು ನೆಟ್ಟು ಪ್ರಕೃತಿ ಸಂರಕ್ಷಣೆಗೆ ಪ್ರತಿಜ್ಞೆ ಕೈಗೊಂಡರು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಹಿರಿಯ ಕೃಷಿಕ, ಒಕ್ಕೂಟದ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಶೆಟ್ಟಿಗಾರ್ ಪರಿಸರ ಸಂರಕ್ಷಣೆ, ಮಳೆನೀರು ಕೊಯ್ಲು, ಪ್ಲಾಸ್ಟಿಕ್ ನಿಯಂತ್ರಣದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. “ಒಂದು ಮಗು ಒಂದು ಗಿಡ” ಎಂಬ ಧ್ಯೇಯದೊಂದಿಗೆ ಮಕ್ಕಳಲ್ಲಿ ಪರಿಸರ ಪ್ರೀತಿ ಬೆಳೆಸುವಂತೆ ಕರೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಡಾ. ಎಂ. ಎಸ್. ರಾವ್, ಹೆಬ್ರಿ ಆಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಚಂದ್ರ ಎಂ.,ಮುದ್ರಾಡಿ ವಲಯದ ಮೇಲ್ವಿಚಾರಕರಾದ ಉಮೇಶ್ ಬಿ. ಕೆ. ಪಾಲ್ಗೊಂಡು ಶುಭ ಹಾರೈಸಿದರು. ಬಲ್ಲಾಡಿ ಅರ್ಧನಾರೀಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಶುಭಧರ ಶೆಟ್ಟಿ, ಪಂಚಾಯತ್ ನಿಕಟಪೂರ್ವ ಸದಸ್ಯರಾದ ಸನತ್ ಕುಮಾರ್, ಸೇವಾನಿರತರಾದ ಮಮತಾ, ಸುಜಯ, ಸುವಿಧಾ ಸಹಾಯಕಿ ಅಜಿತಾ, ಅಧ್ಯಾಪಕ ವೃಂದದವರು, ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕ ಪಿ. ವಿ. ಆನಂದ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿ, ಶ್ಯಾಮಲಾ ವಂದಿಸಿದರು.

































