
ಬೆಂಗಳೂರು: ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ರಾಜ್ಯದಲ್ಲಿ ಶಕ್ತಿ ಯೋಜನೆಯ ಮೂಲಕ ಎಲ್ಲ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಸಂಸ್ಥೆಗಳ ಸಾಮಾನ್ಯ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಂತೆ ರಾಜ್ಯದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಪುರುಷರಿಗೂ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ರಾಜ್ಯದಾದ್ಯಂತ ಕಡು ಬಡ ಕುಟುಂಬಕ್ಕೆ ಸೇರಿರುವ ಸಾವಿರಾರು ಮಂದಿ ಮೂತ್ರಪಿಂಡದ ಸಮಸ್ಯೆಯಿಂದ ಬಳಲಿ ಡಯಾಲಿಸಿಸ್ಗಾಗಿ ವಾರಕ್ಕೊಮ್ಮೆ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಿಗೆ ಹೋಗಬೇಕಿದೆ. ಹೀಗಾಗಿ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಪುರುಷರಿಗೂ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಗೂ ರಾಜ್ಯ ನಗರ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಬೇಕು. ಈ ಮೂಲಕ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವವರ ಚಿಕಿತ್ಸೆಗೆ ಅನುಕೂಲ ಮಾಡಿಕೊಡಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ತಮ್ಮಲ್ಲಿ ಕೋರುತ್ತೇನೆ. ಜೊತೆಗೆ, ಸಾಮಾಜಿಕ ಕಾರ್ಯಕರ್ತ ಸೈಯದ್ ಮೆಹೀಬುರ್ ರೆಹಮಾನ್ ಸಮೀನ್ ನೀಡಿರುವ ಮನವಿಯನ್ನು ತಮ್ಮ ಅವಗಾಹನೆಗಾಗಿ ಲಗತ್ತಿಸಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ಷರೀಫ್ ಮನವಿ ಮಾಡಿದ್ದಾರೆ.









