
ಬೆಂಗಳೂರು: ರಾಜ್ಯದೊಳಗೆ ಕನ್ನಡಕ್ಕೆ ಮೊದಲ ಆದ್ಯತೆ ಸಿಗಬೇಕು ಎಂಬ ಉದ್ದೇಶವನ್ನಿಟ್ಟುಕೊಂಡು ಕನ್ನಡಪರ ಸಂಘಟನೆಗಳ ತೀವ್ರ ಹೋರಾಟದ ಫಲವಾಗಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ ಅನುಷ್ಠಾನದ ಬೆನ್ನಲ್ಲೇ ಇದೀಗ ರಾಜ್ಯದೊಳಗೆ ಉತ್ಪಾದನೆಯಾಗುವ ಹಾಗೂ ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಮುದ್ರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಇದೀಗ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸೇರಿದಂತೆ ಇನ್ನಿತರ ಕನ್ನಡಪರ ಸಂಘಟನೆಗಳ ತೀವ್ರ ಹೋರಾಟದ ಫಲವಾಗಿ ರಾಜ್ಯದೊಳಗೆ ಉತ್ಪಾದನೆಯಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಮುದ್ರಿಸುವುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2020ರ ಕಲಂ 17 (7)ರಲ್ಲಿ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಇತರ ಭಾಷೆಯ ಜತೆಗೆ ಕನ್ನಡದಲ್ಲಿಯೂ ಇರಬೇಕು ಎಂಬ ಅಂಶವಿದೆ. ಅದನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು.
ಅದರಂತೆ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜತೆಗೆ ಕನ್ನಡದಲ್ಲೂ ಮುದ್ರಿಸಬೇಕು ಎಂದು ಉದ್ಯಮಗಳಿಗೆ ಆದೇಶಿಸಿದೆ. ಹಾಗೆಯೇ, ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕನ್ನಡ ಬಳಕೆ ಆದೇಶ ಪಾಲಿಸುತ್ತಿದ್ದಾರೆಯೇ ಎಂಬ ಬಗ್ಗೆ ನಿಗದಿತ ಪ್ರಾಧಿಕಾರಿಗಳು ಮೇಲ್ವಿಚಾರಣೆ ಮಾಡುವಂತೆಯೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆದೇಶ ನೀಡಿದೆ.






















































