
ಇಂದು ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಸುಮಾರು ನಾಲ್ಕು ಸಾವಿರ ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.
ಈ ಮೊದಲು ಎಫ್ಐಆರ್ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದರು. ಇದನ್ನು ಚಾರ್ಜ್ಶೀಟ್ನಲ್ಲಿ ಬದಲಿಸಿ ದರ್ಶನ್ ಎ1 ಹಾಗೂ ಪವಿತ್ರಾ ಎ2 ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಭಾಗಿಯಾದ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು 3 ಪ್ರತ್ಯಕ್ಷ ಸಾಕ್ಷಿಗಳು ಇವೆ. ಎಫ್ಎಸ್ಎಲ್ ಮತ್ತು ಸಿಎಫ್ಎಸ್ಎಲ್ನಿಂದ 8 ವರದಿಗಳು ಇವೆ. ಈ ಪ್ರಕರಣದಲ್ಲಿ ಒಟ್ಟೂ 231 ಸಾಕ್ಷಿಗಳಿದ್ದು ಕೊಲೆ ಕೇಸ್ನಲ್ಲಿ ಇನ್ನೂ ತನಿಖೆ ಪೂರ್ಣಗೊಂಡಿಲ್ಲ. ಹೀಗಾಗಿ ಸಿಆರ್ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.
ಚಾರ್ಜ್ಶೀಟ್ನಲ್ಲಿ ಕಿಡ್ನಾಪ್ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ನಂತ್ರ ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಉಲ್ಲೇಖವಾಗಿದ್ದು ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ಅವರ ರಕ್ತ ಇರುವುದು ಪತ್ತೆ ಆಗಿದೆ. ಇದರಿಂದ ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ ಬಗ್ಗೆ ಖಚಿತ ಮಾಹಿತಿ ಸಿಕ್ಕಂತೆ ಆಗಿದೆ.
ಕೊಲೆ ಮಾಡಲು ಮೂಲ ಕಾರಣ ಪವಿತ್ರಾ ಗೌಡ. ಹೀಗಾಗಿ, ಅವರು ಎ1 ಆಗಿದ್ದಾರೆ. ಹಲ್ಲೆ ನಡೆಯುವ ಸ್ಥಳದಲ್ಲಿ ಅವರು ಹಾಜರಿದ್ದರು. ಚಪ್ಪಲಿಯಲ್ಲಿ ಅವರು ಹೊಡೆದಿದ್ದಾರೆ. ಕೃತ್ಯ ನಡೆದ ಸಮಯದಲ್ಲಿ ಪವಿತ್ರ ಗೌಡ ಅಲ್ಲೇ ಇರುವುದಕ್ಕೆ ಸಾಕ್ಷಿ ಸಿಕ್ಕಿದೆ. ಪವಿತ್ರ ಗೌಡ ಮೊಬೈಲ್ ಕೃತ್ಯದ ಸ್ಥಳದಲ್ಲಿ ಆಕ್ಟೀವ್ ಆಗಿತ್ತು.













