
ನವದೆಹಲಿ: ರೈಲುಗಳಲ್ಲಿ ಪ್ರಯಾಣಿಕರ ಸುರಕ್ಷತೆ ಹೆಚ್ಚಿಸುವುದು ಹಾಗೂ ರೈಲ್ವೆ ಆವರಣದಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ಭಾರತೀಯ ರೈಲ್ವೆ ಇಲಾಖೆ ಹೊಸ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಇತ್ತೀಚೆಗೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ‘ಜನ್ ವಿಶ್ವಾಸ್ ಕಾಯ್ದೆ-2026’ ಅನ್ವಯ ಕೆಲವು ಅಪರಾಧಗಳಿಗೆ ವಿಧಿಸುವ ದಂಡದ ಪ್ರಮಾಣವನ್ನು ಹೆಚ್ಚಿಸಲಾಗಿದೆ.
ಹೊಸ ನಿಯಮದ ಪ್ರಕಾರ ರೈಲು ಅಥವಾ ರೈಲ್ವೆ ನಿಲ್ದಾಣದ ಆವರಣದಲ್ಲಿ ಧೂಮಪಾನ ಮಾಡುವುದು, ಅಗತ್ಯ ಪರವಾನಿಗೆ ಇಲ್ಲದೆ ವ್ಯಾಪಾರ ನಡೆಸುವುದು ಹಾಗೂ ಭಿಕ್ಷಾಟನೆ ನಡೆಸುವುದು ಶಿಕ್ಷಾರ್ಹ ಕೃತ್ಯಗಳಾಗಿದ್ದು, ಇವುಗಳಿಗೆ ಈಗ ₹2,000 ದಂಡ ವಿಧಿಸಲಾಗುತ್ತದೆ. ಈ ಹಿಂದೆ ಇದ್ದ ದಂಡದ ಮೊತ್ತವನ್ನು ಹೆಚ್ಚಿಸಲಾಗಿದೆ.
ಈ ನಿಯಮ ಉಲ್ಲಂಘಿಸುವವರ ವಿರುದ್ಧ ರೈಲ್ವೆ ಅಧಿಕಾರಿಗಳು ಅಥವಾ ಪೊಲೀಸರು ಸ್ಥಳದಲ್ಲೇ ದಂಡ ವಿಧಿಸುವ ಅಧಿಕಾರ ಹೊಂದಿದ್ದಾರೆ. ರೈಲ್ವೆ ಆವರಣದಲ್ಲಿ ಶಿಸ್ತು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.








































