
ಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಅವರು ಈಗಾಗಲೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು ಇದೀಗ ಅವರನ್ನು ಹೆಚ್ಚಿನ ವಿಚಾರಣೆಗಾಗಿ 6 ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶಿಸಿದೆ.
ಇಂದು ಬೆಳಗ್ಗೆ ನಾಗೇಂದ್ರ ಅವರನ್ನು ಯಲಹಂಕದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ ನ್ಯಾಯಾಲಯವು ಜು.18 ರ ವರೆಗೆ ಇ.ಡಿ ಕಸ್ಟಡಿಗೆ ನೀಡುವಂತೆ ಆದೇಶಿಸಿದೆ. ಇ.ಡಿ ಅಧಿಕಾರಿಗಳು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಮುಂದೆ ಮನವಿ ಮಾಡಿದರು. ಆದರೆ ನ್ಯಾಯಾಧೀಶರು 6 ದಿನ ಕಸ್ಟಡಿಗೆ ನೀಡಿ ಜು.18 ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಬಳಿಕ ನ್ಯಾಯಾಧೀಶರ ಮನೆಯಿಂದ ಇ.ಡಿ ಕಚೇರಿಗೆ ಆರೋಪಿಯನ್ನು ಇ.ಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ.
ನಾಗೇಂದ್ರ ಅವರು ನ್ಯಾಯಾಧೀಶರ ಮುಂದೆ ಅನಾರೋಗ್ಯ ಸಮಸ್ಯೆ ಬಗ್ಗೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಪ್ರತಿದಿನ ಮೂರು ಗಂಟೆ ವಿಚಾಣೆಗೆ ಅವಕಾಶ ನೀಡಿ ವಿಚಾರಣೆ ಬಳಿಕ 30 ನಿಮಷಗಳ ಕಾಲ ವಿಶ್ರಾಂತಿ ನೀಡಬೇಕು. ಪ್ರತಿದಿನ ವೈದ್ಯಕೀಯ ತಪಾಸಣೆ ಮಾಡುವಂತೆ ಸೂಚಿಸಿದ್ದಾರೆ.





