
ವಿಜಯಪುರ: ಸಿಎಂ ಸಿದ್ದರಾಮಯ್ಯ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ತಾಲೂಕಿನ ವಿವಿಧ ಕಾಮಗಾರಿಗಳ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ದು ಈ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು. ವಿರೋಧ ಪಕ್ಷದವರು ಅಭಿವೃದ್ಧಿ ಕೆಲಸಗಳು ನಿಂತಿವೆ, ಗ್ಯಾರಂಟಿ ಯೋಜನೆ ಘೋಷಣೆಯಾದ ಮೇಲೆ ಇವರ ಬಳಿ ಹಣವಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಸುಳ್ಳು, ಅಪಪ್ರಚಾರ, ಬಿಟ್ಟಿ ಕೆಲಸಗಳಲ್ಲಿ ಅವರು ನಿರತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂಡಿ ಮತ್ತು ನಾಗಠಾಣ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮವನ್ನು ಸಂತೋಷದಿಂದ ಉದ್ಘಾಟಿಸಿದ್ದೇನೆ. ₹ 4559 ಕೋಟಿ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಾಗಿದ್ದು ಇಷ್ಟು ದೊಡ್ಡ ಕಾರ್ಯಕ್ರಮಕ್ಕೆ ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕದೊಂಡ ಅವರ ಶ್ರಮವಿದೆ. ನನ್ನ ಮನವಿಗೆ ಓಗೊಟ್ಟು ಯಶವಂತರಾಯಗೌಡ, ವಿಠ್ಠಲ ಅವರನ್ನು ಗೆಲ್ಲಿಸಿದ್ದೀರಿ ಎಂದು ಹೇಳಿದರು.
ಜನರ ಅಭಿವೃದ್ಧಿ ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರ ಮಾತ್ರ. ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಬಿಜೆಪಿ, ಜೆಡಿಎಸ್ನವರು ಹೇಳುತ್ತಿರುವುದು ಅಪ್ಪಟ ಸುಳ್ಳು. ನಮ್ಮ ಸರ್ಕಾರ ಬಂದಾಗ ಯಾವತ್ತೂ ಖಜಾನೆ ಖಾಲಿಯಾದ ಉದಾಹರಣೆಯೇ ಇಲ್ಲ. ಈ ಬಾರಿ ₹593 ಭರವಸೆ ಕೊಟ್ಟಿದ್ದೆವು. ಎರಡೇ ವರ್ಷದಲ್ಲಿ 242 ಭರವಸೆ ಈಡೇರಿಸಿದ್ದೇವೆ. ಆದರೆ, ಬಿಜೆಪಿಯವರು 2018ರಲ್ಲಿ 600 ಭರವಸೆ ಕೊಟ್ಟಿದ್ದರು. ಅದರಲ್ಲಿ ಕೇವಲ ಶೇ.10ನಷ್ಟು ಈಡೇರಿಸಿದ್ದಾರೆ ಎಂದು ವಿವರಿಸಿದರು.






















































