
ಕಾರ್ಕಳ, ಜುಲೈ 29: ವಿಶ್ವ ಹೆಪಟೈಟಿಸ್ ದಿನಾಚರಣೆಯ ಅಂಗವಾಗಿ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ಹಾಗೂ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಸಹಯೋಗದಲ್ಲಿ ಯಕೃತ್ ಆರೋಗ್ಯ ಮತ್ತು ಹೆಪಟೈಟಿಸ್ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಶಿರನ್ ಶೆಟ್ಟಿ, ಪ್ರಾಧ್ಯಾಪಕರು, ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗ, ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಹಾಗೂ ಉಪ ವೈದ್ಯಕೀಯ ಅಧೀಕ್ಷಕರು, ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಭಾಗವಹಿಸಿ ಉಪನ್ಯಾಸ ನೀಡಿದರು.
ಅವರು ಯಕೃತಿನ ಆರೋಗ್ಯದ ಮಹತ್ವ, ಹೆಪಟೈಟಿಸ್ ತಡೆಗಟ್ಟುವಲ್ಲಿ ಲಸಿಕೆಗಳ ಪಾತ್ರ, ಸಮತೋಲನ ಆಹಾರ, ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಜೀವನಶೈಲಿಯ ಅಗತ್ಯತೆಯನ್ನು ವಿವರಿಸಿದರು. ಯಕೃತ್ ಸಂಬಂಧಿತ ಕಾಯಿಲೆಗಳ ಶೀಘ್ರ ಪತ್ತೆ ಮತ್ತು ಚಿಕಿತ್ಸೆಯ ಮಹತ್ವವನ್ನೂ ತಿಳಿಸಿದರು.
ರೋಟೇರಿಯನ್ ವಿಜಯೇಂದ್ರ ಕುಮಾರ್, ಅಧ್ಯಕ್ಷರು, ರೋಟರಿ ಕ್ಲಬ್ ಕಾರ್ಕಳ, ಇಂತಹ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಸಮಾಜದ ಆರೋಗ್ಯ ವೃದ್ಧಿಗೆ ಸಹಕಾರಿಯಾಗುತ್ತವೆ ಎಂದು ಹೇಳಿದರು.
ಅಧ್ಯಕ್ಷೀಯ ಭಾಷಣ ಮಾಡಿದ ಡಾ. ಸಂಜಯ್ ಕುಮಾರ್, ಮುಖ್ಯ ವೈದ್ಯಾಧಿಕಾರಿಗಳು, ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಯಕೃತಿನ ಆರೋಗ್ಯದ ಮಹತ್ವವನ್ನು ವಿವರಿಸಿ, ಆಸ್ಪತ್ರೆಯಲ್ಲಿ ಆಗಸ್ಟ್ 3 ರಿಂದ 5, 2026ರವರೆಗೆ ವಿಶೇಷ ಯಕೃತ್ ಆರೋಗ್ಯ ತಪಾಸಣಾ ಪ್ಯಾಕೇಜ್ ಲಭ್ಯವಿರಲಿದೆ ಎಂದು ಘೋಷಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಮಂಜುನಾಥ ಹೆಗ್ಡೆ, ಅಧ್ಯಕ್ಷರು ರೋಟರಿ ಕ್ಲಬ್ ಕಾರ್ಕಳ ರಾಕ್ಸಿಟಿ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ನ ಪದಾಧಿಕಾರಿಗಳು, ಸದಸ್ಯರು ಹಾಗೂ ಆಸ್ಪತ್ರೆಯ ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.


















































