
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಅವರು ಮುಂದಿನ ದಿನಗಳಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ಅದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದು ಇದಕ್ಕೆ ಸೋಮವಾರ ವಿಧಾನಸೌಧದಲ್ಲಿ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಪ್ಪ ಮೊಯ್ಲಿ ಅಥವಾ ಬೇರೆಯವರು ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ, ಕೇವಲ ಹೈಕಮಾಂಡ್ ಏನು ಹೇಳುತ್ತದೆಯೋ ಅದು ಮುಖ್ಯ ಎಂದು ಹೇಳಿದ್ದಾರೆ.
ಸಿಎಂಗೆ ಬೆಂಬಲ ಸೂಚಿಸಿರುವ ಸಚಿವ ಸಂತೋಷ್ ಲಾಡ್ ಕೂಡ ಈ ಕುರಿತು ಪ್ರತಿಕ್ರಿಯಿಸಿ ಅದು ಮೊಯ್ಲಿ ಅವರ ವೈಯಕ್ತಿಕ ಅಭಿಪ್ರಾಯ. ಇಂತಹ ನಿರ್ಣಯ ಏನಿದ್ದರೂ ಹೈಕಮಾಂಡ್ ನಿಂದ ಆಗುತ್ತದೆ. ನಮ್ಮ ಪಕ್ಷಕ್ಕೆ ಹೈಕಮಾಂಡ್ ಸುಪ್ರೀಂ. ನನ್ನ ವಯಕ್ತಿಕ ಅಭಿಪ್ರಾಯ ಇಲ್ಲಿ ಇಲ್ಲ ಎಂದು ಹೇಳಿದ್ದಾರೆ.
ಸಚಿವ ಕೆ.ಎನ್ ರಾಜಣ್ಣ ಅವರು ಪ್ರತಿಕ್ರಿಯಿಸಿ ಮೊಯ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು ಅವರ ವೈಯಕ್ತಿಕ ಅಭಿಪ್ರಾಯವನ್ನು ನಾನು ವಿವಾದ ಮಾಡುವುದಿಲ್ಲ. ಯಾರೇ ಏನು ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದರೂ ಹೈಕಮಾಂಡ್ ನಲ್ಲಿ ಏನು ನಿರ್ಣಯ ಆಗಬೇಕೋ ಅದು ಆಗುತ್ತದೆ. ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರಬೇಕೆಂಬ ಅಭಿಪ್ರಾಯ ಇದೆ ಎಂದು ಹೇಳಿದ್ದಾರೆ.
ಆದರೆ ಡಿಕೆಶಿ ಬೆಂಬಲಿಗರು ಈ ಕುರಿತು ಪ್ರತಿಕ್ರಿಯಿಸಿ ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ ಆಗಿರುವ ವೀರಪ್ಪ ಮೊಯ್ಲಿ ಐದು ದಶಕಗಳಿಗೂ ಹೆಚ್ಚು ಕಾಲ ಕಾಂಗ್ರೆಸ್ ನಲ್ಲಿ ಸಕ್ರಿಯ ರಾಜಕಾರಣಿಯಾಗಿದ್ದು ರಾಜ್ಯ ಮಾತ್ರವಲ್ಲ, ದಿಲ್ಲಿ ಕಾಂಗ್ರೆಸ್ ನಲ್ಲೂ ತಮ್ಮದೇ ಪ್ರಭಾವವುಳ್ಳವರಾಗಿದ್ದಾರೆ. ಅವರಿಗೆ ಕಾಂಗ್ರೆಸ್ ಮನೆಯ ಆಂತರಿಕ ವಿಚಾರಗಳು ಒಂದಲ್ಲ ಒಂದು ರೀತಿಯಲ್ಲಿ ತಿಳಿದಿದ್ದು ಹೀಗಾಗಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.






















































