ನಾಯಕತ್ವ ಬದಲಾವಣೆ ಚರ್ಚೆ ಜೋರು

ನವದೆಹಲಿ: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ, ರಾಜ್ಯ ನಾಯಕರೊಂದಿಗೆ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಬರಲು ರಾಹುಲ್ ಗಾಂಧಿ ಆಹ್ವಾನಿಸಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.
ಇಂದಿರಾ ಭವನದಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ವರಿಷ್ಠರೊಂದಿಗೆ ಚರ್ಚಿಸಿದರು. ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರ ಆಡಳಿತವನ್ನು ಮೆಚ್ಚಿ, ಪಕ್ಷದಲ್ಲಿ ಹೊಸ ನಾಯಕತ್ವಕ್ಕೆ ಅವಕಾಶ ನೀಡುವ ಸಮಯ ಬಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಹಿಂದುಳಿದ ವರ್ಗಗಳ ಪ್ರಮುಖ ನಾಯಕರಾದ ನೀವು ರಾಷ್ಟ್ರ ಮಟ್ಟದಲ್ಲೂ ಅಗತ್ಯವಿದ್ದು, ರಾಜ್ಯಸಭೆ ಮೂಲಕ ದೆಹಲಿಗೆ ಬರಬಹುದು ಎಂದು ಸಲಹೆ ನೀಡಿರುವುದಾಗಿ ವರದಿಯಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಜ್ಯ ರಾಜಕಾರಣದಲ್ಲೇ ಮುಂದುವರಿಯಲು ಆಸಕ್ತಿ ವ್ಯಕ್ತಪಡಿಸಿದ್ದು, ಸರ್ಕಾರದ ಅವಧಿ ಪೂರ್ಣಗೊಳಿಸಿ ಮುಂದಿನ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಇದರ ಮಧ್ಯೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸಾಧ್ಯತೆಗಳ ಕುರಿತು ಊಹಾಪೋಹಗಳು ಹೆಚ್ಚಾಗಿದ್ದು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಬಹುದು ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.




























