ದೆಹಲಿ ಸೂಚನೆ ಏನು?

ಕರ್ನಾಟಕ ಕಾಂಗ್ರೆಸ್ನಲ್ಲಿ ಹಲವು ತಿಂಗಳಿಂದ ಚರ್ಚೆಯಾಗುತ್ತಿದ್ದ ನಾಯಕತ್ವ ಬದಲಾವಣೆ ವಿಚಾರಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸೂಚನೆ ನೀಡಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಕೇಳಿಬಂದಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಕೂಡ ಸ್ಥಾನ ತ್ಯಜಿಸಲು ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.
ಜಾತಿ ಜನಗಣತಿ ವರದಿಯನ್ನು ಮೊದಲು ಸಚಿವ ಸಂಪುಟದ ಮುಂದೆ ಮಂಡಿಸಲು ಸಿದ್ದರಾಮಯ್ಯ ಎರಡು ವಾರಗಳ ಕಾಲಾವಕಾಶ ಕೇಳಿದ್ದರು ಎಂದು ತಿಳಿದುಬಂದಿದೆ. ಆದರೆ ಕಾಂಗ್ರೆಸ್ ನಾಯಕತ್ವವು ತಕ್ಷಣವೇ ನಾಯಕತ್ವ ಬದಲಾವಣೆ ಮಾಡುವ ನಿರ್ಧಾರಕ್ಕೆ ಬಂದಿರುವುದಾಗಿ ವರದಿಯಾಗಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಳಿಕ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಅಧಿಕಾರ ಹಂಚಿಕೆ ಕುರಿತು ಒಪ್ಪಂದ ನಡೆದಿತ್ತು ಎನ್ನಲಾಗುತ್ತಿದೆ. ನಿಗದಿತ ಅವಧಿಗಿಂತ ಹೆಚ್ಚು ಕಾಲ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿದಿದ್ದಾರೆ ಎಂದು ಹೈಕಮಾಂಡ್ ನೆನಪಿಸಿದೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಹರಿದಾಡುತ್ತಿವೆ.
ಇದರ ನಡುವೆ ಡಿ.ಕೆ ಶಿವಕುಮಾರ್ ಶೀಘ್ರದಲ್ಲೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. ಇದೇ ಸಂದರ್ಭ ರಾಜ್ಯಪಾಲರು ಅನಿರೀಕ್ಷಿತವಾಗಿ ಮುಂಬೈಗೆ ತೆರಳಿರುವುದು ಮತ್ತು ಡಿಕೆಶಿ ಆಪ್ತನಿಗೆ ಕಾಂಗ್ರೆಸ್ ಗೇಟ್ಪಾಸ್ ನೀಡಿರುವ ಬೆಳವಣಿಗೆಗಳು ಕಾಂಗ್ರೆಸ್ ಪಾಳಯದಲ್ಲಿ ಕುತೂಹಲ ಹೆಚ್ಚಿಸಿವೆ.




























