
ಕಾರ್ಕಳ, ಜೂನ್ 7: ಸ್ವಚ್ಛ ಕಾರ್ಕಳ ಬ್ರಿಗೇಡ್ ವತಿಯಿಂದ ಶ್ರೀಗುರು ರಾಘವೇಂದ್ರ ಮಠದ ರಸ್ತೆಯಲ್ಲಿರುವ “ಸ್ವಾತಂತ್ರ್ಯ ವನ”ದಲ್ಲಿ ವೃಕ್ಷಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೆಳಿಗ್ಗೆ 6.30 ರಿಂದ 8.30 ರವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಒಟ್ಟು 17 ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಸ್ವಚ್ಛ ಕಾರ್ಕಳ ಬ್ರಿಗೇಡ್ ಸದಸ್ಯರು, ಯುವಶಕ್ತಿ ಆಂಗ್ಲ ಭಾಷಾ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಯುವಶಕ್ತಿ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಯುವಶಕ್ತಿ ಕ್ಲಬ್ನ ಅಧ್ಯಕ್ಷರು ಸೇರಿದಂತೆ ಹಲವರು ಭಾಗವಹಿಸಿದರು.

ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡುವ ಉದ್ದೇಶದಿಂದ ಶಾಲಾ ಮಕ್ಕಳಿಂದಲೂ ಗಿಡಗಳನ್ನು ನೆಡಿಸಲಾಯಿತು. ಕಾರ್ಯಕ್ರಮದ ವೇಳೆ ಸ್ವಚ್ಛ ಕಾರ್ಕಳ ಬ್ರಿಗೇಡ್ ಸದಸ್ಯರು ವಿವಿಧ ಗಿಡಗಳ ಪರಿಚಯ ಮಾಡಿಕೊಟ್ಟು, ಅವುಗಳ ವೈಶಿಷ್ಟ್ಯತೆ, ಉಪಯೋಗಗಳು ಹಾಗೂ ಪರಿಸರ ಸಮತೋಲನ ಕಾಪಾಡುವಲ್ಲಿ ಅವುಗಳ ಪಾತ್ರದ ಕುರಿತು ಮಾಹಿತಿಯನ್ನು ನೀಡಿದರು. ಗಿಡಗಳ ಪಾಲನೆ-ಪೋಷಣೆಯ ಜವಾಬ್ದಾರಿಯನ್ನು ಮಕ್ಕಳಿಗೆ ವಹಿಸುವ ಮೂಲಕ ಪರಿಸರದ ಬಗ್ಗೆ ಕಾಳಜಿ ಬೆಳೆಸುವ ಪ್ರಯತ್ನ ನಡೆಸಲಾಯಿತು.
ಇದೇ ದಿನ ಕಾರ್ಕಳ ಬಸ್ ನಿಲ್ದಾಣದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ವತಿಯಿಂದ ಆಯೋಜಿಸಲಾದ ಸ್ವಚ್ಛತಾ ಅಭಿಯಾನದ ಸಮಾರೋಪ ಸಮಾರಂಭದಲ್ಲಿಯೂ ಸ್ವಚ್ಛ ಕಾರ್ಕಳ ಬ್ರಿಗೇಡ್ ಸದಸ್ಯರು ಭಾಗವಹಿಸಿದರು. ಸಮಾಜದಲ್ಲಿ ಸ್ವಚ್ಛತೆ ಹಾಗೂ ಪರಿಸರ ಜಾಗೃತಿಯನ್ನು ಮೂಡಿಸುವ ಇಂತಹ ಕಾರ್ಯಕ್ರಮಗಳಿಗೆ ಬ್ರಿಗೇಡ್ ತನ್ನ ನಿರಂತರ ಬೆಂಬಲವನ್ನು ನೀಡುತ್ತಿದೆ.
“ಒಂದು ಗಿಡ ನೆಡೋಣ – ಹಸಿರು ಭವಿಷ್ಯ ಬೆಳೆಸೋಣ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

































