
ಬೆಂಗಳೂರು : ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು ಅದೇನೆಂದರೆ ಮಂಜೂರಾತಿ ಹುದ್ದೆಯಲ್ಲಿ 10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಸೇವೆ ಕಾಯಂಗೆ ಅರ್ಹನಾಗುತ್ತಾನೆ ಎಂದು ಹಳಿದೆ.
ಆನೇಕಲ್ ವಲಯದಲ್ಲಿ ಅರಣ್ಯ ವೀಕ್ಷಕ (ಫಾರೆಸ್ಟ್ ವಾಚರ್) ಪಿ.ಜುಂಜಪ್ಪ (53) ತಮ್ಮ ಸೇವೆ ಕಾಯಂಗೊಳಿಸಲು ನಿರಾಕರಿಸಿ ಅರಣ್ಯ ಇಲಾಖೆ ನೀಡಿದ್ದ ಹಿಂಬರಹ ಮತ್ತು ಹಿಂಬರಹ ಪುರಸ್ಕರಿಸಿದ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ (ಕೆಎಟಿ) ಆದೇಶ ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್ ಅವರ ಪೀಠವು ದಿನಗೂಲಿ ಆಧಾರದಲ್ಲಿ ಸತತ 30 ವರ್ಷ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಆದೇಶ ಮಾಡಿದೆ.
ಪ್ರಕರಣದ ಹಿನ್ನೆಲೆ:
ಜುಂಜಪ್ಪ ದಿನಗೂಲಿ ಆಧಾರದ ಮೇಲೆ 30 ವರ್ಷ ನಿರಂತರವಾಗಿ ಅರಣ್ಯ ವೀಕ್ಷಕ ಹಾಗೂ ಚಾಲಕನಾಗಿ ಕೆಲಸ ಮಾಡಿದ್ದರೂ ಅವರ ಸೇವೆ ಕಾಯಂಗೊಳಿಸಲು ನಿರಾಕರಿಸಿ 2016ರ ಆ.29ರಂದು ಅರಣ್ಯ ಇಲಾಖೆ ಹಿಂಬರಹ ನೀಡಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೆಎಟಿ ವಜಾಗೊಳಿಸಿ 2019ರ ಜು.31ರಂದು ಆದೇಶಿಸಿತ್ತು. ಇದರಿಂದ ಜುಂಜಪ್ಪ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಇದೀಗ ಅವರ ಕೆಲಸ ಕಾಯಂಗೊಳಿಸುವಂತೆ ಆದೇಶ ಹೊರಡಿಸಿದೆ.






























































































































