
ಹೈಕಮಾಂಡ್ ಬುಲಾವ್ ನ ಮೇರೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿ ತೆರಳಿದ್ದು, ಈ ವೇಳೆ ಜಾತಿ ಗಣತಿ ವರದಿಯ ಬಗ್ಗೆಯೂ ಚರ್ಚೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ, ಪ್ರಸ್ತುತ ಜಾತಿ ಗಣತಿ ವರದಿ 10 ವರ್ಷ ಹಳೆಯದಾಗಿರುವ ಕಾರಣ ನಿರ್ದಿಷ್ಟ ಕಾಲಮಿತಿಯಲ್ಲಿ ಮರು ಸಮೀಕ್ಷೆ ನಡೆಸಲು ಸರಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ವಿ. ಸುನಿಲ್ ಕುಮಾರ್ ರಾಜ್ಯ ಸರ್ಕಾರ ತಯಾರಿಸಿದ ಜಾತಿ ಗಣತಿ ವರದಿಯನ್ನು ಖುದ್ದು ಕಾಂಗ್ರೆಸ್ ಹೈಕಮಾಂಡ್ ಕಿತ್ತು ಬಿಸಾಕಿದೆ. 150 ಕೋಟಿ ರೂ.ವೆಚ್ಚ ಮಾಡಿ ತಯಾರಿಸಿದ ಈ ವರದಿ ರಾಜ್ಯದ ತೆರಿಗೆದಾರರಿಗೆ ಮಾಡಿದ ಮಹಾಮೋಸದ ಜತೆಗೆ ಹಿಂದುಳಿದ ಹಾಗೂ ಶೋಷಿತ ಸಮುದಾಯಕ್ಕೆ ಮಾಡಿದ ಮಹಾಮೋಸವಾಗಿತ್ತು.
ಜಾತಿ ಗಣತಿ ವರದಿಯ ದತ್ತಾಂಶದಲ್ಲಿ ಲೋಪವಿದೆ, ಇದನ್ನು ಪುನರ್ ಪರಿಶೀಲಿಸಬೇಕು ಎಂದು ಭಾರತೀಯ ಜನತಾ ಪಕ್ಷ ಪದೇ ಪದೇ ಆಗ್ರಹಿಸಿತ್ತು. ಆದರೆ ಸಿದ್ದರಾಮಯ್ಯನವರು ಇಂಥ ಸೂಕ್ಷ್ಮ ವಿಚಾರದಲ್ಲೂ ತಮ್ಮ ಎಂದಿನ ಉಡಾಫೆಯನ್ನು ಮುಂದುವರಿಸಿದ್ದರು. ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿದ್ದರು. ನಂದಿಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿ ಸ್ವೀಕರಿಸುವುದಕ್ಕೂ ಮುಂದಾಗಿದ್ದರು. ಆದರೆ ಈ ವರದಿಯ ದತ್ತಾಂಶ ಸರಿಯಿಲ್ಲ, ಕಾಲಮಿತಿಯಲ್ಲಿ ಮರು ಗಣತಿ ಮಾಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಕಿವಿ ಹಿಂಡಿ ವರದಿಯನ್ನು ಕಸದ ಬುಟ್ಟಿಗೆ ಬಿಸಾಕಿದೆ.
ಸಿದ್ದರಾಮಯ್ಯನವರಷ್ಟೇ ಅಲ್ಲ, ಕಾಂಗ್ರೆಸ್ ಹೈಕಮಾಂಡ್ ಕೂಡಾ ರಾಜ್ಯದ ಹಿಂದುಳಿದ ವರ್ಗ, ಶೋಷಿತ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಸಿದ್ದರಾಮಯ್ಯನವರು ಇದೇ ವಿಚಾದವನ್ನು ಇಟ್ಟುಕೊಂಡು ರಾಜ್ಯದ ಜನರನ್ನು ಮೂರ್ಖರನ್ನಾಗಿಸುವ ಜತೆಗೆ ಸಮುದಾಯಗಳ ಮಧ್ಯೆ ಅಸಮಧಾನ, ಬೇಸರವನ್ನು ಸೃಷ್ಟಿಸಿದ್ದರು. ಈ ಎಲ್ಲ ಅವಾಂತರಗಳ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ಶಾಸಕ ವಿ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ



















