
ಬೆಂಗಳೂರು: ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಲು ರಚಿಸಲಾಗಿದ್ದ ದಿಶಾ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ಹಣ ಬಿಡುಗಡೆಯಾಗುತ್ತಿಲ್ಲ. 2024-25ನೇ ಸಾಲಿನ ಕೇಂದ್ರದ ಪಾಲು ಇನ್ನೂ 4,195 ಕೋಟಿ ರು. ಬಿಡುಗಡೆ ಮಾಡಬೇಕಿದ್ದು, ರಾಜ್ಯದ ಸಂಸದರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನ ತರಲು ಪ್ರಯತ್ನಿಸಬೇಕು ಎಂದು ಕಿಡಿಕಾರಿದ್ದಾರೆ.
67 ಕೇಂದ್ರ ಪುರಸ್ಕೃತ ಯೋಜನೆಗಳಿದ್ದು, ಅವುಗಳ ಪ್ರಗತಿ ಪರಿಶೀಲನೆ ನಡೆಸಲಾಗಿದೆ. 2024-25ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ 46,859 ಕೋಟಿ ರು. ಖರ್ಚು ಮಾಡಲಾಗಿದೆ. ಅದರಲ್ಲಿ 24,960 ಕೋಟಿ ರು. ರಾಜ್ಯದ ಅನುದಾನವಾಗಿದೆ. ಇನ್ನು ಕೇಂದ್ರದ ಪಾಲು 22,758 ಕೋಟಿ ರು.ಗಳಾಗಿದ್ದು, ಅದರಲ್ಲಿ ಕೇಂದ್ರ ಸರ್ಕಾರ 18,561 ಕೋಟಿ ರು. ನೀಡಿದೆ. ಇನ್ನೂ 4,195 ಕೋಟಿ ರು. ಬಿಡುಗಡೆ ಮಾಡಬೇಕಿದೆ. ಆ ಹಣವನ್ನು ತರಲು ರಾಜ್ಯದ ಎಲ್ಲ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದಿದ್ದಾರೆ.