
ಯಲ್ಲಾಪುರ: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜ. 6ರಂದು ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಮತ್ತು ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಜಿಲ್ಲಾ ತಾಲೂಕು ಘಟಕಗಳು, ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಮಟ್ಟದ ಪ್ರೌಢಶಾಲಾ ಶಿಕ್ಷಕರ ಶೈಕ್ಷಣಿಕ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ಈ ವೇಳೆ ಶೈಕ್ಷಣಿಕ ವ್ಯವಸ್ಥೆಯಲ್ಲಿ 1ರಿಂದ 9ನೇ ತರಗತಿಯವರೆಗೆ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಾಮೂಹಿಕವಾಗಿ ಉತ್ತೀರ್ಣಗೊಳಿಸುವ ಸರ್ಕಾರದ ಕ್ರಮ ಜಗತ್ತಿನಲ್ಲೆಲ್ಲೂ ಇಲ್ಲದ ಮೂರ್ಖತನದ್ದು ಎಂದು ಹೇಳಿದ್ದಾರೆ.
ಆರ್ಥಿಕ ಇಲಾಖೆಯ ಅಧಿಕಾರಿಗಳು ಸದಾ ಶಿಕ್ಷಣ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗೆ ಮತ್ತು ಶಿಕ್ಷಕರಿಗೆ ಸಿಗುವ ಎಲ್ಲ ಸೌಲಭ್ಯಗಳು ಅನುದಾನಿತರಿಗೂ ಸಿಗುವಂತಾಗಬೇಕು. ನ್ಯಾಯಾಲಯವೇ ಪ್ರತಿಯೊಬ್ಬ ನೌಕರನಿಗೂ ಪಿಂಚಣಿ ನೀಡಲೇಬೆಂಕೆಂದು ಆದೇಶಿಸಿದೆ. ಸರ್ಕಾರ ಏಕೆ ಮೀನಮೇಷ ಮಾಡುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಶಿಕ್ಷಕರಲ್ಲಿ ಹೋರಾಟದ ಮನೋಭಾವ ಕಡಿಮೆಯಾಗಿದೆ. ಶಿಕ್ಷಕರು ಸಂಘಟಿತರಾಗಿ ಅಧ್ಯಯನಶೀಲರಾಗಿ ವಾರಕ್ಕೊಂದು ದಿನ ಮಕ್ಕಳಿಗೆ ನೈತಿಕ ಶಿಕ್ಷಣ ಕಡ್ಡಾಯವಾಗಿ ನೀಡಬೇಕು. ಸಂಸ್ಕಾರ ಮಕ್ಕಳಿಗೆ ದೊರೆಯದೇ ಯುವಕರು ಪಾಲಕರನ್ನು ವೃದ್ಧಾಶ್ರಮಕ್ಕೆ ತಳ್ಳುತ್ತಿದ್ದಾರೆ. ಆದ್ದರಿಂದ ಪಾಲಕರ ಮತ್ತು ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಸಲಹೆ ನೀಡಿದರು.



















