
ನವದೆಹಲಿ: 9ನೇ ತರಗತಿ ವಿದ್ಯಾರ್ಥಿಗಳಿಗೆ ಜುಲೈ 1ರಿಂದ ತ್ರಿಭಾಷಾ ಅಧ್ಯಯನ ಕಡ್ಡಾಯಗೊಳಿಸುವ ಸಿಬಿಎಸ್ಇ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಹೊಸ ಅರ್ಜಿ ಸಲ್ಲಿಸಲಾಗಿದೆ.
ಶಿಕ್ಷಣ ತಜ್ಞ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಡಾ. ಫೈಝಿಯಾ ಖಾನ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ, ಮೇ 15ರಂದು ಸಿಬಿಎಸ್ಇ ಹೊರಡಿಸಿದ ಸುತ್ತೋಲೆ ಅಸಮಂಜಸ ಮತ್ತು ವಿವಾದಾತ್ಮಕವಾಗಿದೆ ಎಂದು ವಾದಿಸಿದ್ದಾರೆ.
ಸುತ್ತೋಲೆಯ ಉದ್ದೇಶ ದಕ್ಷಿಣ ಭಾರತದ ರಾಜ್ಯಗಳಲ್ಲಿ ಹಿಂದಿ ಹಾಗೂ ಉತ್ತರ ಭಾರತದ ರಾಜ್ಯಗಳಲ್ಲಿ ಸಂಸ್ಕೃತವನ್ನು ಪರೋಕ್ಷವಾಗಿ ಕಡ್ಡಾಯಗೊಳಿಸುವಂತಿದೆ. ಇದರಿಂದಾಗಿ ನ್ಯಾಯಾಲಯ ಮಧ್ಯಪ್ರವೇಶಿಸಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಸಿಬಿಎಸ್ಇ ಮೇ 15ರಂದು ಹೊರಡಿಸಿದ್ದ ಸುತ್ತೋಲೆಯ ಪ್ರಕಾರ, 9ನೇ ತರಗತಿ ವಿದ್ಯಾರ್ಥಿಗಳು ಎರಡು ಭಾರತೀಯ ಭಾಷೆಗಳು ಸೇರಿ ಒಟ್ಟು ಮೂರು ಭಾಷೆಗಳನ್ನು ಕಡ್ಡಾಯವಾಗಿ ಕಲಿಯಬೇಕಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಲ್ಲಿಕೆಯಾಗಿದ್ದ ಮತ್ತೊಂದು ಅರ್ಜಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಮೇ 27ರಂದು ಸಿಬಿಎಸ್ಇಗೆ ನೋಟಿಸ್ ಜಾರಿಗೊಳಿಸಿತ್ತು.

































