
ಬೆಂಗಳೂರು: ರಾಜ್ಯ ಹೈಕೋರ್ಟ್ 2012ರ ಅಕ್ಟೋಬರ್ 9ರಂದು ನಡೆದಿದ್ದ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶಿಸಿ ಪ್ರಕರಣದಿಂದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ರದ್ದು ಪಡಿಸಬೇಕು ಮತ್ತು ಸಂತೋಷ್ಗೆ ಪರಿಹಾರ ನೀಡಬೇಕು ಎಂದು ಸಲ್ಲಿಕೆಯಾಗಿದ್ದ ಮೂರೂ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ.
ಸೌಜನ್ಯಾ ತಂದೆ ಧರ್ಮಸ್ಥಳದ ನಿವಾಸಿ ಚಂದಪ್ಪ ಗೌಡ ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಎಂದು ಕೋರಿ ಹೈಕೊರ್ಟ್ ಮೊರೆ ಹೋಗಿದ್ದು ಇನ್ನು ಪ್ರಕರಣದಲ್ಲಿ ಕಾರ್ಕಳ ತಾಲೂಕಿನ ಕುಕ್ಕುಂದೂರಿನ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ರದ್ದುಪಡಿಸಬೇಕು ಎಂದು ಸಿಬಿಐ ಹೈಕೋರ್ಟ್ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿತ್ತು, ಇದರ ಜತೆಗೆ ಸಂತೋಷ್ ರಾವ್, ಪ್ರಕರಣದಲ್ಲಿ ಸೂಕ್ತ ತನಿಖೆ ನಡೆಸದ ತನಿಖಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ತನ್ನ ವಿರುದ್ಧ ತನಿಖಾಧಿಕಾರಿಗಳು ದುರುದ್ದೇಶಪೂರಿತ ಪ್ರಾಸಿ ಕ್ಯೂಷನ್ ನಡೆಸಿದ ಹಿನ್ನೆಲೆಯಲ್ಲಿ 50 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರಕಾರಕ್ಕೆ ಅದೇಶಿಸಬೇಕು ಎಂದು ಕೋರ್ಟಿಗೆ ಮನವಿ ಸಲ್ಲಿಸಿದ್ದರು.
ಶುಕ್ರವಾರ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಜೆ.ಎಂ. ಖಾಜಿ ಅವರ ವಿಭಾಗೀಯ ಪೀಠವು ಈ ಮೂರು ಅರ್ಜಿಗಳನ್ನು ವಜಾಗೊಳಿಸಿ ತೀರ್ಪು ನೀಡಿದೆ.













