
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು 14 ಸೈಟ್ಗಳನ್ನು ವಾಪಸ್ ಮಾಡೋದಾಗಿ ಮುಡಾಗೆ ಪತ್ರ ಬರೆದಿರೋದು ಬಿಜೆಪಿಗೆ ಮತ್ತೊಂದು ಬ್ರಹ್ಮಾಸ್ತ್ರವೇ ಸಿಕ್ಕಂತಾಗಿದ್ದು ತಪ್ಪೇ ಮಾಡುತ್ತಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪು ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯ ಎಂದು ಹೇಳಿದ್ದಾರೆ.
ಈ ಕುರಿತು ಬಿ.ವೈ ವಿಜಯೇಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? ಎಂದು ನಿನ್ನೆ ಆರ್.ಅಶೋಕ್ ಪ್ರಶ್ನಿಸಿದ್ದರು. ಇಂದು ಮುಡಾ ಸೈಟ್ ವಾಪಸ್ ಕೊಟ್ಟಿರುವುದು ರಾಜಕೀಯ ಡ್ರಾಮಾ. ಸಿದ್ದರಾಮಯ್ಯನವರು ಇನ್ನು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯನವರು ಮೊದಲು ರಾಜ್ಯಪಾಲರ ಬಳಿ ಕ್ಷಮೆ ಕೇಳಿ ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು. ರಾಜೀನಾಮೆ ನೀಡುವ ಮೊದಲು ಡಿಜಿಪಿಯವರು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಪಾರ್ವತಿ ಅವರು ಅವರಾಗಿಯೇ ಪತ್ರ ಬರೆದಿದ್ದಾರೋ ಅಥವಾ ಬಲವಂತವಾಗಿ ಬರೆದಿದ್ದಾರೋ ಗೊತ್ತಿಲ್ಲ. ನಾನು ಜಗ್ಗಲ್ಲ, ಬಗ್ಗಲ್ಲ ಅಂತಾ ಸಿದ್ದರಾಮಯ್ಯ ಆರ್ಭಟ ಮಾಡುತ್ತಿದ್ದು ಇದೀಗ ಸಿದ್ದರಾಮಯ್ಯ ಸೈಟ್ ವಾಪಸ್ ಕೊಡುವ ನಿರ್ಧಾರ ಕೈಗೊಂಡಿದ್ದಾರೆ ಎಂದರೆ ಕಾನೂನಿನ ಕುಣಿಕೆಯಿಂದ ಪಾರಾಗಿ ರಾಜಕೀಯ ಅನುಕಂಪ ಪಡೆಯಬೇಕು, ಸ್ವಪಕ್ಷದಲ್ಲೇ ತಡೆ ತಟ್ಟುವವರನ್ನು ಎದುರಿಸಬೇಕು ಅಂತಾ ಅಷ್ಟೇ. ಸೈಟ್ ವಾಪಸ್ ಕೊಟ್ಟಿರೋದು ರಾಜಕೀಯ ಡ್ರಾಮಾ ಎಂದಿದ್ದಾರೆ.













