
ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಬುಧವಾರ ‘ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ ಮುಡಾ ಹಗರಣವನ್ನು ಮರೆ ಮಾಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಿಡುಗಡೆಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ಸಿಗರು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ, ಯಾರೂ ಮನೆಗೆ ಬಂದೇ ಇಲ್ಲ ಎಂಬುದಾಗಿ ಲಿಂಗಾಯತ, ಒಕ್ಕಲಿಗ ಸೇರಿದಂತೆ ಇತರೆ ಸಮುದಾಯದವರು ತಿಳಿಸಿದ್ದಾರೆ. ಕೆಲವೇ ಜಾತಿಗಳ ವೈಭವೀಕರಣ ಮತ್ತು ಇನ್ನೂ ಕೆಲವು ಜಾತಿಗಳ ಮೇಲೆ ದ್ವೇಷ ಮತ್ತು ಅವೈಜ್ಞಾನಿಕತೆ ಕಂಡು ಬಂದಿದೆ ಎಂದು ಆರೋಪಿಸಿದರು.
ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಸಿದ್ದರಾಮಯ್ಯ ವರ ವರದಿ ಬಗ್ಗೆ ಬಾಯಿ ಬಿಡಲಿಲ್ಲ. ಒಂದು ಕಡೆ ಮುಡಾ, ಮತ್ತೊಂದು ಕಡೆ ಇ.ಡಿ. ತನಿಖೆ, ಇನ್ನೊಂದೆಡೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಇವೆಲ್ಲವನ್ನೂ ಮುಚ್ಚಿ ಹಾಕಲು ಈಗ ವರದಿಯನ್ನು ಹೊರತೆಗೆಯಲಾಗಿದೆ. 10 ವರ್ಷವಾಗುತ್ತಿದ್ದರೂ ಜಾತಿ ಗಣತಿ ವರದಿ ಬಿಡುಗಡೆಯಾಗಿಲ್ಲ. ಕಾಂಗ್ರೆಸ್ನಲ್ಲಿಯೇ ವರದಿ ಬಿಡುಗಡೆಗೆ ವಿರೋಧ ಇದೆ. ಅವರ ಪಕ್ಷದಲ್ಲಿನ ಗೊಂದಲ ಬಗೆಹರಿಸುವುದು ಬಿಟ್ಟು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.













