ದಾವಣಗೆರೆ ಅಂಗನವಾಡಿ ಕಾರ್ಯಕರ್ತೆಯ ಆತ್ಮಹತ್ಯೆ ಖೇದಕರ
ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ

ಕಾರ್ಕಳ ಅ 14: ಅಂಗನವಾಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಯಕರ್ತೆಯರ ರಾಜ್ಯ ಕಾಂಗ್ರೆಸ್ ಸರಕಾರ ಮೂರು ತಿಂಗಳಿನಿಂದ ಸಂಬಳ ನೀಡದೆ ಸತಾಯಿಸುತ್ತಿದೆ. ವೇತನ ಸಿಗದೇ ಕುಟುಂಬ ನಿರ್ವಹಣೆ ಕಷ್ಟಕರವಾದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯೊಬ್ಬರು
ಆತ್ಮಹತ್ಯೆಗೆ ಶರಣಾಗಿರುವುದು ಖೇದಕರ ಎಂದು ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರದ ದಿಕೆಟ್ಟ-ಅವೈಜ್ಞಾನಿಕ ಆರ್ಥಿಕ ನೀತಿಯಿಂದಾಗಿ ರಾಜ್ಯ ದಿವಾಳಿಯಾಗುತ್ತಿದೆ ಸರ್ಕಾರದಲ್ಲಿ ಅತ್ಯಲ್ಪ ವೇತನಕ್ಕೆ ದುಡಿಯುವ
ಅಂಗನವಾಡಿ ಕಾರ್ಯಕರ್ತರಿಗೂ ಸಂಬಳ ನೀಡದಷ್ಟು ಆರ್ಥಿಕ ಪರಿಸ್ಥಿತಿ ಅದೋಗತಿಗೆ ಹೋಗಿದೆ. ಹೀಗಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾತ್ರ ತನ್ನ ಕುರ್ಚಿ ಉಳಿಸಿಕೊಳ್ಳುವ ಹೋರಾಟದಲ್ಲಿ ನಿರತರಾಗಿದ್ದಾರೆ. ಇಡೀ ರಾಜ್ಯ ಸರ್ಕಾರವೇ ಭ್ರಷ್ಟಾಚಾರದಿಂದ ಮುಳುಗಿ ಹೋಗಿದೆ,
ಬಡವರ ಕಣ್ಣೀರು ಒರೆಸಬೇಕಾದ ಸಚಿವರುಗಳು ತಮ್ಮ ಭ್ರಷ್ಟಾಚಾರವನ್ನು ರಕ್ಷಿಸುವುದಕೋಸ್ಕರ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವಲ್ಲಿ
ಕಾರ್ಯನಿರತರಾಗಿದ್ದಾರೆ.
ಸರ್ಕಾರದ ಎಲ್ಲಾ ಕಾರ್ಯಕ್ರಮಗಳಿಗೂ ದುಡಿಸಿಕೊಳ್ಳುವ ಸರಕಾರ, ತಿಂಗಳುಗಟ್ಟಲೆ ಸಂಬಳ ನೀಡದೆ ಅನ್ಯಾಯ ಮಾಡುತ್ತಿದೆ. ತನ್ನ
ಹೊಣೆಗಾರಿಕೆಯನ್ನು ಮರೆತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ತನ್ನ ಇಲಾಖೆಯ
ಆಧೀನದಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ನ್ಯಾಯ ಕೊಟ್ಟಿಲ್ಲ. ಆದುದರಿಂದ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ
ನೀಡಬೇಕು ಹಾಗೂ ತಕ್ಷಣ ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತರಿಗೆ ಸಂಬಳ ಬಿಡುಗಡೆ ಮಾಡಬೇಕು, ಭಾರತೀಯ ಜನತಾ ಪಾರ್ಟಿ ರಾಜ್ಯದ
ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಸದಾ ನಿಲ್ಲಲಿದೆ, ಎಂದು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ವಿನಯ ಡಿ. ಬಂಗೇರ ಮತ್ತು
ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಮಾಲಿನಿ ಜೆ ಶೆಟ್ಟಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.













