
ಬೆಂಗಳೂರು: ಮಂಗಳವಾರ ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡವೊಂದು ದಿಢೀರ್ ಕುಸಿದುಬಿದ್ದ ಅವಘಡದಲ್ಲಿ ಅವಶೇಷಗಳಡಿಯಲ್ಲಿ ಸಿಲುಕಿ ಒಟ್ಟು ಐವರು ಮೃತಪಟ್ಟಿರುವುದು ವರದಿಯಾಗಿದೆ.
ರಕ್ಷಣಾ ಕಾರ್ಯ ಮುಂದುವರೆದಿದ್ದು, ಬುಧವಾರ ಬೆಳಗ್ಗೆ ಓರ್ವ ಕಾರ್ಮಿಕರನ್ನು ರಕ್ಷಿಸಲಾಗಿದೆ. ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಉಳಿದ ಕಾರ್ಮಿಕರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಬಿಹಾರದ ಅರ್ಮಾನ್(26) ಎಂಬ ಕಾರ್ಮಿಕ ಕಟ್ಟಡ ಕುಸಿದು ಬಿದ್ದ ದಿನವೇ ಮೃತ ಪಟ್ಟಿದ್ದ. ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು ಅವರ ರಕ್ಷಣೆ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಂಧ್ರಪ್ರದೇಶದ ಮುನಿರಾಜು ರೆಡ್ಡಿ ಎಂಬವರು ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ 6 ಅಂತಸ್ತಿನ ಕಟ್ಟಡ ನಿರ್ಮಿಸುತ್ತಿದ್ದು ಯಾದಗಿರಿ, ಬಿಹಾರ, ಆಂಧ್ರಪ್ರದೇಶದ 21 ಮಂದಿ ಕಾರ್ಮಿಕರು ಈ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಹಗಲಿನಲ್ಲಿ ಕೆಲಸ ಮಾಡಿ, ರಾತ್ರಿ ವೇಳೆ ಕಟ್ಟಡದಲ್ಲಿಯೇ ಮಲಗುತ್ತಿದ್ದರು. ಮಂಗಳವಾರ ಬೆಳಗ್ಗೆಯೇ ಎಲ್ಲ ಕಾರ್ಮಿಕರು ಕಟ್ಟಡ ಒಳಭಾಗದಲ್ಲಿ ಟೈಲ್ಸ್ ಸೇರಿ ಇತರ ಕೆಲಸ ಮಾಡುತ್ತಿದ್ದರು. ಆದರೆ, ಸಂಜೆ 4 ಗಂಟೆ ಸುಮಾರಿಗೆ ಏಕಾಏಕಿ ಕಟ್ಟಡದ ಪಿಲ್ಲರ್ಗಳಲ್ಲಿ ಬಿರುಕು ಕಾಣಿಸಿಕೊಂಡು ಇಡೀ ಕಟ್ಟಡ ಬಲಭಾಗಕ್ಕೆ ಬಿದ್ದಿದೆ. ಈ ವೇಳೆ ಒಂದಿಬ್ಬರು ಕಾರ್ಮಿಕರು ಕಟ್ಟಡದಿಂದ ಮರಳಿನ ಮೇಲೆ ಜಿಗಿದು ಪ್ರಾಣ ಉಳಿಸಿಕೊಂಡರೆ, ಇನ್ನು ಕೆಲವರು ಒಳಗಡೆಯೇ ಸಿಲುಕಿಕೊಂಡಿದ್ದಾರೆ ಎಂದು ರಕ್ಷಣಾ ತಂಡ ತಿಳಿಸಿದೆ.
ವಿಚಾರ ತಿಳಿದು ಕೂಡಲೇ ಹೆಣ್ಣೂರು ಪೊಲೀಸರು, ಪೂರ್ವ ವಿಭಾಗದ ಡಿಸಿಪಿ ದೇವರಾಜು, ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿ ನಂತರ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ ಕೂಡ ಸ್ಥಳಕ್ಕೆ ಧಾವಿಸಿ ಜೆಸಿಬಿ ಹಾಗೂ ಕಬ್ಬಿಣ ಕತ್ತರಿಸುವ ಯಂತ್ರಗಳ ಸಹಾಯದಿಂದ ಅವಶೇಷಗಳ ಅಡಿ ಸಿಲುಕಿದ್ದ 13 ಮಂದಿ ಕಾರ್ಮಿಕರನ್ನು ರಕ್ಷಿಸಿದರು. ರಕ್ಷಣಾ ಕಾರ್ಯಾಚರಣೆಯಲ್ಲಿ ಹೊರ ತಂದ 13 ಮಂದಿ ಕಾರ್ಮಿಕರ ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಉಳಿದ ಕಾರ್ಮಿಕರನ್ನು ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.






















































