ಬಾಲ ಕಾರ್ಮಿಕ ಪದ್ಧತಿ ತಡೆಗೆ ಕಾರ್ಕಳ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆ

ತಹಶೀಲ್ದಾರ್ ಡಾ. ಪ್ರತಿಭಾ ಆರ್ ರವರ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲ್ಲೂಕಿನಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಿ ಪುರ್ನವಸತಿ ಕಲ್ಪಿಸಲು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದೆ. ತಹಶೀಲ್ದಾರ್ ಡಾ.ಪ್ರತಿಭಾ ಆರ್ ಅಧ್ಯಕ್ಷತೆಯಲ್ಲಿ ನ.4 ರಂದು ತಹಶೀಲ್ದಾರ್ ಕಚೇರಿಯಲ್ಲಿ ಸಭೆ ನಡೆಯಿತು.
ತಹಶಿಲ್ದಾರ್ ಡಾ. ಪ್ರತಿಭಾ ಆರ್ ಟಾಸ್ಕ್ ಫೋರ್ಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
‘ಬಾಲ ಕಾರ್ಮಿಕರ ರಕ್ಷಣೆಗಾಗಿ ತಾಲ್ಲೂಕಿನಾದ್ಯಂತ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಾಗಿ ನಡೆಸಬೇಕು. ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. 18 ವರ್ಷದೊಳಗಿನವರನ್ನು ಅಪಾಯಕಾರಿ ಕ್ಷೇತ್ರಗಳಲ್ಲಿ ದುಡಿಸಿಕೊಳ್ಳುವಂತಿಲ್ಲ’ ಎಂದರು.
ಕಾನೂನು ಉಲ್ಲಂಘಿಸಿದರೆ ಕನಿಷ್ಠ 6 ತಿಂಗಳಿಂದ ಗರಿಷ್ಠ 2 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ₹20 ಸಾವಿರದಿಂದ ₹50 ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಬಾಲ ಕಾರ್ಮಿಕ ಪದ್ಧತಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು’ ಎಂದು ಹೇಳಿದರು.
‘ಬಾಲ ಕಾರ್ಮಿಕ ಪದ್ಧತಿ ಹಾಗೂ ಆ ಕುರಿತು ಇರುವ ಕಾನೂನಿನ ಅರಿವು- ನೆರವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಟೊ ಪ್ರಚಾರ, ಬೀದಿ ನಾಟಕ, ಗೋಡೆ ಬರಹದ ಜೊತೆಗೆ ಕರಪತ್ರ ಮತ್ತು ಭಿತ್ತಿ ಚಿತ್ರಗಳನ್ನು ಹಂಚಿ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.
‘ಸಾರ್ವಜನಿಕರು ಸಹ ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಯಾರಾದರೂ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ– 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ– 112 ಸಂಖ್ಯೆಗೆ ಕರೆ ಮಾಡಿ ಮಕ್ಕಳ ರಕ್ಷಣೆಗೆ ಸಹಕಾರ ನೀಡಬೇಕು’ ಎಂದರು.
ಯಾವ ಮಗುವೂ ಶಾಲೆಯಿಂದ ಹೊರಗುಳಿಯಬಾರದು ಎಂದು ಶಿಕ್ಷ ಇಲಾಖೆಯ ಅಧಿಕಾರಿಗಳಿಗೆ ತಹಶಿಲ್ದಾರ್ ಪ್ರತಿಭಾ ತಾಕೀತು ಮಾಡಿದರು.
ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ದತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯ ಅವಕಾಶಗಳನ್ನು ತಡೆಗಟ್ಟುತ್ತದೆ.
ಕ್ರಷರ್ ಹಾಗೂ ಕಲ್ಲು ಕೋರಿಗಳಲ್ಲಿ ಬಾಲ ಕಾರ್ಮಿಕ ಪ್ರಕರಣಗಳು ಕಂಡುಬರುವ ಸಾಧ್ಯತೆಯಿದ್ದು ಸದರಿ ಸ್ಥಳಗಳಲ್ಲಿ ಬಾಲ್ಯಾವಸ್ಥೆಯ ಮತ್ತು ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ 1986 ಕಲಂ – 17 ರಡಿ ನೇಮಕಗೊಂಡಿರುವ ನಿರೀಕ್ಷಕರು ಜಂಟಿ ತಪಾಸಣೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ತಹಶಿಲ್ದಾರ್ ಪ್ರತಿಭಾ ಆರ್ ಸಭೆಗೆ ತಿಳಿಸಿದರು.
ಸದರಿ ಸಭೆಗೆ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರುಗಳು ಹಾಜರಿದ್ದರು.
ಕಾರ್ಮಿಕ ಇಲಾಖೆ ಅಧಿಕಾರಿ ನವೀನ್ ಕಾರ್ಯಕ್ರಮ ನಿರೂಪಿಸಿದರು.






















































