
ಬೆಂಗಳೂರು: ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ, ಆರ್. ನಾಗರಾಜು ಮತ್ತಿತರರು ಸಲ್ಲಿಸಿ ರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದು ಈ ವೇಳೆ ಈ ಪ್ರಕರಣದಲ್ಲಿ 11ನೇ ಆರೋಪಿ ಹಾಗೂ ನಟ ದರ್ಶನ್ ಅವರ ಮ್ಯಾನೇಜರ್ ನಾಗರಾಜು ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟ ಅವರು ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಆರ್.ಆರ್. ನಗರದ ಪಟ್ಟಣಗೆರೆ ಶೆಡ್ನಲ್ಲಿ ನಡೆದಿದೆ ಎನ್ನುವುದಕ್ಕೆ ಸಾಕ್ಷಿಗಳ ಹೇಳಿಕೆಯಲ್ಲಿ ಒಂದೇ ಒಂದು ಪದ ಇಲ್ಲ. ಕೊಲೆಯ ಉದ್ದೇಶ ಮತ್ತು ಪಿತೂರಿಗೆ ಯಾವುದೇ ಸಾಕ್ಷಿ ಇಲ್ಲ. ಹೀಗಾಗಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ನಡೆದಿರುವ ಕುರಿತು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳಲ್ಲಿನ ದ್ವಂದ್ವಗಳು, ಎಫ್ ಐಆರ್ ದಾಖಲಿಸಲು ವಿಳಂಬ ಮಾಡಿರುವುದು, ರೇಣುಕಸ್ವಾಮಿ ಮೃತದೇಹದ ಮರಣೋತ್ತರ ಪರೀಕ್ಷೆ ವಿಳಂಬವಾಗಿರುವುದು, ಕೊಲೆ ಪ್ರಕರಣದ ಪೂರ್ಣ ಮಾಹಿತಿಯು 132ನೇ ಸಾಕ್ಷಿಯಾಗಿರುವ ಪೊಲೀಸ್ ಇನ್ಸ್ಪೆಕ್ಟರ್ ವಿನಯ್ ಅವರಿಗೆ ಇದ್ದರೂ, ಅವರನ್ನು ಬಿಟ್ಟು ಅಪಾರ್ಟ್ಮೆಂಟ್ನ ಭದ್ರತಾ ಸಿಬ್ಬಂದಿ ನರೇಂದ್ರಸಿಂಗ್ ದೂರು ಆಧರಿಸಿ ತಡವಾಗಿ ಎಫ್ಐಆರ್ ದಾಖಲಿಸಿರುವುದು ಸೇರಿದಂತೆ ಇಡೀ ಪ್ರಕರಣದಲ್ಲಿ ಆಗಿರುವ 11ಕ್ಕೂ ಹೆಚ್ಚು ವ್ಯತ್ಯಯಗಳನ್ನು ನ್ಯಾಯಾಲಯದ ಮುಂದೆ ಪಟ್ಟಿ ಮಾಡಿ ವಿವರಿಸಿದರು. ಒಂದು ಗಂಟೆ ಸಂದೇಶ್ ಚೌಟ ವಾದ ಮಂಡಿಸಿ, ಮುಕ್ತಾಯಗೊಳಿಸಿದರು.
ಪವಿತ್ರಾಗೌಡ ಸೇರಿ ಉಳಿದ ಆರೋಪಿಗಳ ಪರ ವಕೀಲರು ವಾದ ಮಂಡಿಸಬೇಕಿರುವ ಹಿನ್ನೆಲೆಯಲ್ಲಿ ನ್ಯಾಯಪೀಠವು ವಿಚಾರಣೆಯನ್ನು ಡಿಸೆಂಬರ್ 3ಕ್ಕೆ ಮುಂದೂಡಿದೆ.



















