
ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರಕಾರದ ವಿರುದ್ಧ ಲಾರಿ ಮಾಲಕರ ಸಂಘವು ಏಪ್ರಿಲ್ 14ರ ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ಮುಂದಾಗಿದ್ದು ಈ ಕುರಿತು ಶನಿವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮಾಲಕರ ಸಂಘದ ಅಧ್ಯಕ್ಷ ಜಿ. ಆರ್ ಷಣ್ಮುಗಪ್ಪ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡನೇ ಬಾರಿ ಡೀಸೆಲ್ ದರ ಹೆಚ್ಚಳ ಮಾಡಿದೆ. ಇದರಿಂದ ಲಾರಿ ಮಾಲಕರು ವಿಷ ಕುಡಿಯುವ ಪರಿಸ್ಥಿತಿ ಬಂದಿದ್ದು ಹೀಗಾಗಿ ಡೀಸೆಲ್ ದರವನ್ನು ಇಳಿಸುವಂತೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿ.ಆರ್ ಷಣ್ಮುಗಪ್ಪ ನಮ್ಮ ಹೋರಾಟ ಶುರುವಾದ ಬಳಿಕ ಯಾವುದೇ ರಾಜ್ಯದಿಂದ ಕರ್ನಾಟಕದೊಳಗೆ ವಾಣಿಜ್ಯ ವಾಹನ ಸಂಚಾರ ಮಾಡುವುದಿಲ್ಲ. ಎಲ್ಲಾ ಲಾರಿಗಳನ್ನು ಟೋಲ್ ಮತ್ತು ಹೈವೇಗಳಲ್ಲಿ ಬಿಟ್ಟು ಮುಷ್ಕರ ಮಾಡಲಿದ್ದು ಈ ನಮ್ಮ ಮುಷ್ಕರಕ್ಕೆ ಏರ್ಪೋರ್ಟ್ ಟ್ಯಾಕ್ಸಿ ಸಂಘ ಮತ್ತು ಪೆಟ್ರೋಲ್-ಡೀಸೆಲ್ ಬಂಕ್ ಸಂಘಟನೆಗಳು ಸಹ ಬೆಂಬಲ ಸೂಚಿಸಿವೆ ಎಂದು ತಿಳಿಸಿದರು.
ಬೇಡಿಕೆಗಳು:
- ಡೀಸೆಲ್ ದರ ಇಳಿಕೆಯ ಜೊತೆಗೆ ಟೋಲ್ ದರ ಕಡಿಮೆ ಮಾಡುವುದು.
- ಬಾರ್ಡರ್ ಚೆಕ್ ಪೋಸ್ಟ್ ತೆರವುಗೊಳಿಸುವುದು.
- ಎಫ್ ಸಿ ಶುಲ್ಕ ಇಳಿಕೆ ಮಾಡುವುದು.





















