
ಇಸ್ಲಾಮಾಬಾದ್: ಭಾರತಕ್ಕೆ ಯಾವಾಗಲೂ ಯುದ್ಧ ಮತ್ತು ಪರಮಾಣು ದಾಳಿಯ ಬೆದರಿಕೆ ಹಾಕುವ ಪಾಕಿಸ್ತಾನಿ ಪ್ರಧಾನಿ ಶಹಬಾಜ್ ಷರೀಫ್, ಇದೀಗ ‘‘ನಾವು ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧರಿದ್ದೇವೆ’’ ಎಂದು ಹೇಳಿದ್ದಾರೆ.
ಭಾರತದೊಂದಿಗಿನ ಸಂಘರ್ಷದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಹಾಗೂ ಸೈನಿಕರನ್ನು ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು ಈ ಸಂದರ್ಭದಲ್ಲಿ ಭಾರತದೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.
ಶೆಹಬಾಜ್ ಅವರೊಂದಿಗೆ ಉಪ ಪ್ರಧಾನಿ ಇಶಾಕ್ ದಾರ್, ರಕ್ಷಣಾ ಸಚಿವ ಖವಾಜಾ ಆಸಿಫ್, ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ವಾಯುಪಡೆಯ ಮುಖ್ಯಸ್ಥ, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಜಹೀರ್ ಅಹ್ಮದ್ ಬಾಬರ್ ಸಿಧು ವಾಯುನೆಲೆಗೆ ಬಂದಿದ್ದರು.
ಬುಧವಾರ, ಶೆಹಬಾಜ್ ಸಿಯಾಲ್ಕೋಟ್ನ ಪಸ್ರೂರ್ ಕಂಟೋನ್ಮೆಂಟ್ಗೆ ಭೇಟಿ ನೀಡಿ ಅಲ್ಲಿ ಅವರು ಸೈನಿಕರೊಂದಿಗೆ ಸಂವಾದ ನಡೆಸಿದ್ದರು. ಈ ಮೊದಲು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಯಾವಾಗಲೂ ಅದರ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗಗಳಾಗಿರುತ್ತವೆ ಎಂದು ಭಾರತ ಸಮರ್ಥಿಸಿಕೊಂಡಿತ್ತು.
ಭಾರತ ಮತ್ತು ಪಾಕಿಸ್ತಾನ ಮೇ 10 ರಂದು ಡಿಜಿಎಂಒ ಮಟ್ಟದ ಮಾತುಕತೆಯಲ್ಲಿ ಯುದ್ಧವನ್ನು ಕೊನೆಗೊಳಿಸಲು ಒಪ್ಪಿಕೊಂಡಿದ್ದು ಇದೀಗ ಎರಡೂ ದೇಶಗಳು ವಿಶ್ವಾಸ ವೃದ್ಧಿ ಕ್ರಮಗಳನ್ನು ಮುಂದುವರಿಸಲು ನಿರ್ಧರಿಸಿವೆ. ಮಾಹಿತಿಯ ಪ್ರಕಾರ, ಯುದ್ಧವನ್ನು ಕೊನೆಗೊಳಿಸುವ ಕುರಿತು ಎರಡೂ ದೇಶಗಳ ನಡುವೆ ಮಾಡಿಕೊಂಡ ಒಪ್ಪಂದವನ್ನು ಮೇ 18 ರವರೆಗೆ ವಿಸ್ತರಿಸಲಾಗಿದೆ ಎಂದು ಪಾಕಿಸ್ತಾನಿ ಸೇನೆ ಮಾಹಿತಿ ನೀಡಿದೆ.






