
ಬೆಂಗಳೂರು: ಇತ್ತೀಚಿಗೆ ನಟ ಕಮಲ್ ಹಾಸನ್ ಕಾರ್ಯಕ್ರಮವೊಂದರಲ್ಲಿ ಕನ್ನಡವು ತಮಿಳಿನಿಂದ ಹುಟ್ಟಿದ ಭಾಷೆ ಎಂದು ಕುಚೇಷ್ಟೆಯ ಹೇಳಿಕೆ ನೀಡಿ ಕನ್ನಡಿಗರ ಸ್ವಾಭಿಮಾನ ಕೆಣಕಿದ್ದು ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಕಮಲ್ ಹಾಸನ್ ಅವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ‘ಥಗ್ಲೈಫ್’ ಸಿನಿಮಾ ಬಿಡುಗಡೆ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಮಲ್ಹಾಸನ್ ತಮ್ಮ ಹೊಸ ಸಿನಿಮಾ ‘ಥಗ್ಲೈಫ್’ ಪ್ರಚಾರದ ವೇಳೆ ಕನ್ನಡವು ತಮಿಳು ಭಾಷೆಯಿಂದ ಹುಟ್ಟಿದೆ ಎಂದು ನೀಡಿರುವ ಹೇಳಿಕೆ ಸರಿಯಲ್ಲ. ತಮಿಳಿಗರನ್ನು ಓಲೈಸಲು ಕನ್ನಡ ಮತ್ತು ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಜತೆಗೆ ಕ್ಷಮೆ ಕೇಳುವುದಿಲ್ಲ ಎಂದು ಉದ್ಧಟತನದ ಹೇಳಿಕೆ ನೀಡಿ ಕನ್ನಡಿಗರನ್ನು ಮತ್ತಷ್ಟು ಕೆಣಕಿದ್ದಾರೆ. ಹೀಗಾಗಿ ಅವರ ಥಗ್ ಲೈಫ್ ಸಿನಿಮಾವನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು. ಇಲ್ಲದಿದ್ದರೆ ಸಿನಿಮಾ ಪ್ರದರ್ಶನ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಾಕುತ್ತೇವೆ ಎಂದು ಹೇಳಿದ್ದಾರೆ.
ನಟ ಶಿವರಾಜ್ಕುಮಾರ್ಗೆ ಅಭಿಮಾನ ಇದ್ದರೆ ಈಗಲೂ ಕಾಲ ಮಿಂಚಿಲ್ಲ. ಕಮಲ್ಹಾಸನ್ ಅವರಿಂದ ಕ್ಷಮೆ ಕೇಳಿಸಲಿ. ಕಮಲ್ ಹಾಸನ್ ಬಗ್ಗೆ ನಮಗೂ ಗೌರವವಿದೆ. ಆದರೆ, ಕನ್ನಡಕ್ಕಿಂತಲೂ ದೊಡ್ಡದು ಯಾವುದೂ ಇಲ್ಲ. ಬೇರೆ ಭಾಷೆ ಬಗ್ಗೆ ಮಾತನಾಡುವಾಗ ಅರಿವು ಇರಬೇಕು. ಕಮಲ್ ಹೇಳಿಕೆ ಬಗ್ಗೆ ಕನ್ನಡದ ನಟ-ನಟಿಯರು ಖಂಡಿಸಬೇಕು ಎಂದಿದ್ದಾರೆ.






















































