
ಬೆಂಗಳೂರು: ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರೇ ವಿವಿಧ ಇಲಾಖೆಗಳ ವಿರುದ್ಧ ಲಂಚದ ಆರೋಪ, ಸಚಿವರ ಕಾರ್ಯವೈಖರಿ ಬಗ್ಗೆ ಬಹಿರಂಗ ಅಸಮಾಧಾನ ಹಾಗೂ ಅನುದಾನಕ್ಕಾಗಿ ಬೇಡಿಕೆ ಇಟ್ಟು ರಾಜ್ಯ ಸರ್ಕಾರವನ್ನು ಮುಜುಗರಕ್ಕೆ ಒಳಪಡಿಸುತ್ತಿರುವ ಸ್ವಪಕ್ಷೀಯ ಶಾಸಕರಿಗೆ ಸ್ಪಷ್ಟ ಸೂಚನೆ ನೀಡುವಂತೆ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕೀತು ಮಾಡಿದೆ.
ಶಾಸಕರ ಸಮಸ್ಯೆಗಳು ಏನೇ ಇದ್ದರೂ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರನ್ನು ಖುದ್ದು ಭೇಟಿಯಾಗಿ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಸ್ವಪಕ್ಷೀಯ ಶಾಸಕರೇ ಈ ರೀತಿ ಸರ್ಕಾರದ ವಿರುದ್ಧ ಆರೋಪ, ಅಸಮಾಧಾನ ಹೊರಹಾಕಿದರೆ ಕಾರ್ಯಕರ್ತರಿಗೆ, ಜನತೆಗೆ ತಪ್ಪು ಸಂದೇಶ ಹೋಗುತ್ತದೆ. ಜತೆಗೆ ಪ್ರತಿಪಕ್ಷಗಳು ಇದನ್ನು ಉಪಯೋಗಿಸಿಕೊಂಡು ಸರ್ಕಾರದ ವಿರುದ್ಧ ಟೀಕೆ, ಮುಗಿಬೀಳಲು ದಾರಿಯಾಗುತ್ತದೆ. ಶಾಸಕರ ಇಂಥ ನಡೆ ಸಹಿಸಲು ಸಾಧ್ಯವಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಕೂಡಲೇ ಸಂಬಂಧಿಸಿದ ಎಲ್ಲ ಶಾಸಕರನ್ನು ಕರೆಸಿ ಬಾಯಿಗೆ ಬೀಗ ಹಾಕಿಕೊಂಡು ಇರುವಂತೆ ಬುದ್ಧಿ ಹೇಳಿ ಎಂದು ಸೂಚಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ಬುದ್ದಿ ಹೇಳಲು ಜು.13ಕ್ಕೆ ಅವರೇ ಖುದ್ದು ರಾಜ್ಯಕ್ಕೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿಯವರ ಭೇಟಿ ಸಂದರ್ಭದಲ್ಲೇ ಸುರ್ಜೇವಾಲ ಅವರು ಹೇಳಿದ್ದಾರೆ ಎನ್ನಲಾಗಿದೆ.






















































