
ದುಬೈ: ಏಷ್ಯಾ ಕಪ್ ನಲ್ಲಿ ಟೀಮ್ ಇಂಡಿಯಾ ಪಾಕ್ ವಿರುದ್ಧ ಗೆಲುವು ಸಾಧಿಸಿದ್ದು ಪಾಕಿಸ್ತಾನ ಸಚಿವ ಹಾಗೂ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿಯಿಂದ ಏಷ್ಯಾ ಕಪ್ ಚಾಂಪಿಯನ್ಸ್ ಟ್ರೋಫಿಯನ್ನು ಸ್ವೀಕರಿಸಲು ಭಾರತ ನಿರಾಕರಿಸಿದ ಹಿನ್ನೆಲೆಯಲ್ಲಿ ಟ್ರೋಫಿ ಸ್ವೀಕಾರ ಸಮಾರಂಭದಲ್ಲಿ ವಿಳಂಬವಾಯಿತು.
ಎರಡೂ ರಾಷ್ಟ್ರಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಮತ್ತು ಕ್ರೀಡಾ ಉದ್ವಿಗ್ನತೆಯನ್ನು ಪ್ರತಿಬಿಂಬಿಸುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನಿರ್ದೇಶನದ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿ ಉಗ್ರರು ದಾಳಿ ನಡೆಸಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತು. ಇದು ಉಭಯ ದೇಶಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿ ಅಲ್ಲಿಂದ ಎರಡೂ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟಿದೆ.
ಇದು ಕ್ರಿಕೆಟ್ ತಂಡದ ಮೇಲೆಯೂ ಪರಿಣಾಮ ಬೀರಿತ್ತು. ಭಾರಿ ವಿರೋಧದ ನಡುವೆಯೂ ಟೀಂ ಇಂಡಿಯಾ ಏಷ್ಯಾ ಕಪ್ ಟೂರ್ನಿಯಲ್ಲಿ ಆಡಿತ್ತು. ಆದರೆ, ಪಾಕ್ ವಿರುದ್ಧದ ಪಂದ್ಯದಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿತು. ಪಾಕ್ ಆಟಗಾರರಿಗೆ ಹ್ಯಾಂಡ್ಶೇಕ್ ಮಾಡಲಿಲ್ಲ. ಹೀಗೆ, ಎರಡೂ ದೇಶಗಳ ನಡುವಿನ ಪಂದ್ಯದಲ್ಲಿ ಕ್ರಿಕೆಟ್ ನಿಯಮ ಉಲ್ಲಂಘನೆಯಂತಹ ಪ್ರಸಂಗಗಳು ನಡೆದಿದೆ.






















































