
ಭೋಪಾಲ್: ಭಾನುವಾರ ಮಧ್ಯಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ನೌಕರರ ಸಂಘವಾದ ಎ.ಜೆ.ಕೆ.ಎಸ್ ನ ಹೊಸದಾಗಿ ಆಯ್ಕೆಯಾದ ಪ್ರಾಂತೀಯ ಅಧ್ಯಕ್ಷ, ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾ ವಿವಾದಾತ್ಮಕ ಹೇಳಿಕೆ ನೀಡಿ ಕೋಲಾಹಲ ಎಬ್ಬಿಸಿದ್ದಾರೆ.
ಭೋಪಾಲ್ನ ಅಂಬೇಡ್ಕರ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವರ್ಮಾ ‘ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಅವನೊಂದಿಗೆ ಸಂಬಂಧ ಹೊಂದುವವರೆಗೂ ಮೀಸಲಾತಿ ಮುಂದುವರಿಯಬೇಕು..’ ಎಂದು ಹೇಳಿದ್ದು ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಡುತ್ತಿದ್ದಂತೆ, ಬ್ರಾಹ್ಮಣ ಸಂಘಟನೆಗಳು ವರ್ಮಾ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದೆ.
ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ ಅಖಿಲ ಭಾರತ ಬ್ರಾಹ್ಮಣ ಸಮಾಜದ ರಾಜ್ಯ ಅಧ್ಯಕ್ಷ ಪುಷ್ಪೇಂದ್ರ ಮಿಶ್ರಾ “ಬ್ರಾಹ್ಮಣ ಹೆಣ್ಣುಮಕ್ಕಳ ವಿರುದ್ಧ ಮಾಡಿದ ಟೀಕೆಗಳಿಗೆ ತಕ್ಷಣವೇ ಎಫ್ಐಆರ್ ದಾಖಲಿಸಬೇಕು. ಐಎಎಸ್ ಅಧಿಕಾರಿಯ ಹೇಳಿಕೆಗಳು ಅಸಭ್ಯ, ಆಕ್ಷೇಪಾರ್ಹ ಮತ್ತು ಬ್ರಾಹ್ಮಣ ಸಮುದಾಯಕ್ಕೆ ಮಾಡಿದ ಅವಮಾನ. ಶೀಘ್ರದಲ್ಲೇ ಕ್ರಿಮಿನಲ್ ಮೊಕದ್ದಮೆ ಹೂಡದಿದ್ದರೆ, ಬ್ರಾಹ್ಮಣ ಸಮಾಜವು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ” ಎಂದು ಹೇಳಿದ್ದಾರೆ.






















































