
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಬದಲಾವಣೆ ಮಾಡಿರುವ ‘ಕೇಂದ್ರದ ಈ ನಡೆ ಸರ್ವಾಧಿಕಾರಿ ಧೋರಣೆಯ ಪ್ರದರ್ಶನ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುಮಾರು 20 ವರ್ಷಗಳ ಹಿಂದೆ ಡಾ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಕಾಲದಲ್ಲಿ ‘ದುಡಿಮೆಯ ಹಕ್ಕು’ ನೀಡುವ ಉದ್ದೇಶದಿಂದ ನರೇಗಾ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಬಡವರಿಗೆ ಆರ್ಥಿಕ ಭದ್ರತೆ ನೀಡುವ ಈ ಕಾಯಿದೆಯನ್ನು ಈಗ ‘ವಿಬಿ ರಾಮ್ ಜೀ’ ಕಾಯಿದೆ ಎಂದು ಬದಲಾಯಿಸಲಾಗಿದೆ. ಈ ಮಹತ್ವದ ಬದಲಾವಣೆ ಮಾಡುವ ಮುನ್ನ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆಗಾಗಲಿ ಅಥವಾ ಜನರ ಜೊತೆಗಾಗಲಿ ಯಾವುದೇ ಚರ್ಚೆ ನಡೆಸಿಲ್ಲ’ ಎಂದು ಕಿಡಿಕಾರಿದ್ದಾರೆ.
ದೇಶದಲ್ಲಿ ಸುಮಾರು 12 ಕೋಟಿ 16 ಲಕ್ಷ ನರೇಗಾ ಕಾರ್ಮಿಕರಿದ್ದಾರೆ. ಇದರಲ್ಲಿ 6 ಕೋಟಿ 21 ಲಕ್ಷ ಮಹಿಳೆಯರು, ಶೇ. 17ರಷ್ಟು ಎಸ್ಸಿ ಮತ್ತು ಶೇ. 11ರಷ್ಟು ಎಸ್ಟಿ ಸಮುದಾಯದವರಿದ್ದಾರೆ. ಕರ್ನಾಟಕವೊಂದರಲ್ಲೇ 71.18 ಲಕ್ಷ ಸಕ್ರಿಯ ಕಾರ್ಮಿಕರಿದ್ದು, ಅದರಲ್ಲಿ ಶೇ. 51.6 ರಷ್ಟು (36.75 ಲಕ್ಷ) ಮಹಿಳೆಯರೇ ಇದ್ದಾರೆ. ‘ಜನರು ನೆಮ್ಮದಿಯಿಂದ ಜೀವಿಸಲು ಪೂರಕವಾಗಿದ್ದ ಕಾನೂನನ್ನು ನಾಶ ಮಾಡುವುದೇ ಬಿಜೆಪಿಯ ಕೆಲಸ. ಇದಕ್ಕೆ ಆರ್ಎಸ್ಎಸ್ ಮಾರ್ಗದರ್ಶನ ನೀಡುತ್ತಿದ್ದು ಈ ಬದಲಾವಣೆಯಿಂದ ಬಡವರಿಗಲ್ಲ, ಕಾರ್ಪೊರೇಟ್ ಕಂಪನಿಗಳಿಗೆ ಲಾಭವಾಗಲಿದೆ’ ಎಂದು ಗಂಭೀರ ಆರೋಪ ಎಸಗಿದ್ದಾರೆ.






