
ಬೆಂಗಳೂರು: ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್ಓ)ಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಉಪ ಆಯುಕ್ತರ ಹುದ್ದೆಗೆ ನಿಯೋಜನೆ ಮಾಡಲಾಗಿದೆ ಎನ್ನುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೆಟರ್ಹೆಡ್ನ ನಕಲಿ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಕಲಿ ಪತ್ರದಲ್ಲಿ ಮಂಡ್ಯ ಜಿಲ್ಲೆಯ ಡಿಎಚ್ಒ ಡಾ. ಕೆ. ಮೋಹನ್ ಅವರನ್ನು ಅಬಕಾರಿ ಹುದ್ದೆಗೆ ನಿಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ. ಆದರೆ ಪತ್ರದಲ್ಲಿ ದಿನಾಂಕ ಹಾಗೂ ಅಧಿಕೃತ ವಿವರಗಳಿಲ್ಲ; ಸಹಿ ಹೊಲಿಕೆಯಾಗಿದೆ ಎನ್ನಲಾಗಿದೆ. ಇದನ್ನು ಆಧರಿಸಿ ಬಿಜೆಪಿ ನಾಯಕರು ಸರ್ಕಾರವನ್ನು ಟೀಕಿಸಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆರೋಗ್ಯ ಇಲಾಖೆಯಿಂದ ಅಬಕಾರಿ ವರ್ಗಾವಣೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿ, ಪತ್ರದ ಪ್ರಾಮಾಣಿಕತೆ ಪರಿಶೀಲನೆಗೆ ಸೂಚಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ, ನಾನು ಯಾವುದೇ ಪತ್ರ ನೀಡಿಲ್ಲ, ಇದು ನಕಲಿ ಎಂದು ಸ್ಪಷ್ಟನೆ ನೀಡಿ, ದುಷ್ಟರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ನಕಲಿ ಸುದ್ದಿಗಳನ್ನು ನಂಬಿ ಹಂಚಿಕೊಳ್ಳುವ ಮೊದಲು ಜನರು ಎಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿದ್ದಾರೆ.




