
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠವು ಮಹಿಳಾ ಉದ್ಯೋಗಿಗಳಿಗೆ ಋತುಚಕ್ರದ ಅವಧಿಯಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡುವ ನೀತಿಯನ್ನು ಎಲ್ಲಾ ಸಂಘಟಿತ ಹಾಗೂ ಅಸಂಘಟಿತ ಕ್ಷೇತ್ರಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಈ ನೀತಿ ಕರ್ನಾಟಕ ಗಜೆಟ್ನಲ್ಲಿ ಪ್ರಕಟವಾಗಿದ್ದರೂ, ಹೋಟೆಲ್ ಸೇರಿದಂತೆ ಹಲವಾರು ಸಂಸ್ಥೆಗಳಲ್ಲಿ ಪರಿಣಾಮಕಾರಿ ಜಾರಿಗೆ ಬರಲಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಹೋಟೆಲ್ ಉದ್ಯೋಗಿ ಚಂದ್ರವ್ವ ಹಣಮಂತ ಗೋಕಾವಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಿಸಿ ತೀರ್ಮಾನ ನೀಡಿದೆ.
ಸರ್ಕಾರದ ನೀತಿ ಎಲ್ಲಾ ವಲಯಗಳಲ್ಲೂ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಜೊತೆಗೆ, ಸಂವಿಧಾನದಲ್ಲಿ ಇರುವ ಜೀವನ ಮತ್ತು ಸಮಾನತೆಯ ಹಕ್ಕಿನ ಆಧಾರದ ಮೇಲೆ ಈ ರೀತಿಯ ರಜೆ ನೀತಿಯನ್ನು ರೂಪಿಸಲಾಗಿದ್ದು, ಅದರ ವ್ಯಾಪ್ತಿಯನ್ನು ವಿಧಾನಸಭೆಯಲ್ಲಿ ಮಂಡಿಸಲಾದ ಮಸೂದೆಗಳ ಮೂಲಕ ವಿಸ್ತರಿಸಲಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.













