ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ

ಡೆಹ್ರಾಡೂನ್: ಉತ್ತರಾಖಂಡದ ಪ್ರಸಿದ್ಧ ಕೇದಾರನಾಥ ಧಾಮಕ್ಕೆ ಈ ಬಾರಿಯ ಚಾರ್ ಧಾಮ್ ಯಾತ್ರೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಈಗಾಗಲೇ 5 ಲಕ್ಷಕ್ಕೂ ಅಧಿಕ ಮಂದಿ ದೇವರ ದರ್ಶನ ಪಡೆದಿದ್ದಾರೆ. ಭಕ್ತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡ ಹಿನ್ನೆಲೆಯಲ್ಲಿ ರುದ್ರಪ್ರಯಾಗ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಕೇದಾರನಾಥಕ್ಕೆ ಆಗಮಿಸುತ್ತಿರುವುದರಿಂದ ಯಾತ್ರಾ ಮಾರ್ಗದಲ್ಲಿ ಜನಸಂದಣಿ ಹೆಚ್ಚಾಗಿದೆ. ಇದರಿಂದ ಆರೋಗ್ಯ ಮತ್ತು ಭದ್ರತಾ ವ್ಯವಸ್ಥೆಗಳ ಮೇಲೆ ಒತ್ತಡ ಉಂಟಾಗುತ್ತಿದೆ.
ಯಾತ್ರಿಕರ ಆರೋಗ್ಯ ಕಾಪಾಡಲು ಆಡಳಿತವು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಸುಮಾರು 52 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಆರೋಗ್ಯ ತಪಾಸಣೆ ನಡೆಸಲಾಗಿದ್ದು, 62 ಸಾವಿರ ಮಂದಿ ಒಪಿಡಿ ಸೇವೆ ಪಡೆದಿದ್ದಾರೆ. ಗಂಭೀರ ಅನಾರೋಗ್ಯಕ್ಕೊಳಗಾದ 26 ಯಾತ್ರಿಕರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ.
ಎತ್ತರದ ಪ್ರದೇಶಗಳಲ್ಲಿ ಆರೋಗ್ಯ ಸಮಸ್ಯೆಗಳ ಸಾಧ್ಯತೆ ಹೆಚ್ಚಿರುವುದರಿಂದ ಇಸಿಜಿ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ 8 ಮಂದಿಯಲ್ಲಿ ಹೃದಯ ಸಂಬಂಧಿ ಸಮಸ್ಯೆಗಳನ್ನು ಮುಂಚಿತವಾಗಿ ಪತ್ತೆಹಚ್ಚಿ ಚಿಕಿತ್ಸೆ ನೀಡಲಾಗಿದೆ.
ಈ ಕುರಿತು ಮಾತನಾಡಿದ ರುದ್ರಪ್ರಯಾಗದ ಮುಖ್ಯ ವೈದ್ಯಾಧಿಕಾರಿ ಡಾ. ರಾಮ್ ಪ್ರಕಾಶ್ “ಹವಾಮಾನ ವೈಪರೀತ್ಯದಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಶ್ವಾಸಕೋಶದ ಸಮಸ್ಯೆ ಇರುವವರು ಹಾಗೂ ಸಣ್ಣ ಮಕ್ಕಳನ್ನು ಕಠಿಣ ಯಾತ್ರೆಗೆ ಕರೆತರದಂತೆ” ಮನವಿ ಮಾಡಿದ್ದಾರೆ.























