
ಬೆಂಗಳೂರು: ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಅನಗತ್ಯ ಚಿನ್ನ ಖರೀದಿ ತಪ್ಪಿಸುವಂತೆ ಕರೆ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿ ಖರೀದಿ ಪ್ರಮಾಣದಲ್ಲಿ ಭಾರೀ ಇಳಿಕೆ ಕಂಡುಬಂದಿದೆ.
ನಗರದ ಆಭರಣ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಮಾರಾಟವು ಶೇ.40ರಷ್ಟು ಕುಸಿದಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಮದುವೆ, ನಾಮಕರಣದಂತಹ ಅಗತ್ಯ ಕಾರ್ಯಕ್ರಮಗಳಿಗೆ ಮಾತ್ರ ಜನರು ತಾಳಿ, ಉಂಗುರ ಸೇರಿದಂತೆ ಅವಶ್ಯಕ ಚಿನ್ನಾಭರಣಗಳನ್ನು ಖರೀದಿಸುತ್ತಿದ್ದಾರೆ ಎನ್ನಲಾಗಿದೆ.
ಮಧ್ಯಮ ವರ್ಗದ ಜನರು ಪ್ರಧಾನಿ ಕರೆಗೂ ಉತ್ತಮ ಸ್ಪಂದನೆ ನೀಡುತ್ತಿದ್ದು, ಚಿನ್ನದ ಮೇಲಿನ ಹೂಡಿಕೆ ಕಡಿಮೆ ಮಾಡುತ್ತಿದ್ದಾರೆ. ಇದರಿಂದ ಆಭರಣ ವ್ಯಾಪಾರ ಕ್ಷೇತ್ರದ ಮೇಲೆ ದೊಡ್ಡ ಮಟ್ಟದ ಪರಿಣಾಮ ಉಂಟಾಗಿದೆ ಎಂದು ಕರ್ನಾಟಕ ರಾಜ್ಯ ಆಭರಣ ತಯಾರಕರ ಸಂಘ ತಿಳಿಸಿದೆ.
ಪರಿಸ್ಥಿತಿ ಸುಧಾರಣೆಗೆ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ವ್ಯಾಪಾರಿಗಳು ಮನವಿ ಮಾಡಿದ್ದಾರೆ. ಬುಲಿಯನ್ ಬ್ಯಾಂಕ್ ಸ್ಥಾಪನೆ, ತೆರಿಗೆ ವಿನಾಯಿತಿ, ಕಾರ್ಮಿಕರಿಗೆ ಸಹಾಯಧನ ಹಾಗೂ ವಿಶೇಷ ಸಾಲ ಸೌಲಭ್ಯ ನೀಡುವಂತೆ ಒತ್ತಾಯಿಸಿದ್ದಾರೆ.
ಚಿನ್ನದ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯಲ್ಲೂ ಇಳಿಕೆ ಕಂಡುಬಂದಿದೆ. ಸಾರ್ವಜನಿಕರು ಸ್ವಂತ ವಾಹನಗಳ ಬದಲು ಮೆಟ್ರೋ ಮತ್ತು ಬಸ್ಗಳಂತಹ ಸಾರ್ವಜನಿಕ ಸಾರಿಗೆ ಬಳಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಆಭರಣ ಮಾರಾಟ ಕುಸಿತದಿಂದ ರಾಜ್ಯದ ಸಾವಿರಾರು ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಉದ್ಯೋಗ ನಷ್ಟದ ಭೀತಿಯೂ ಎದುರಾಗಿದೆ ಎಂದು ಸಂಘಟನೆ ಕಳವಳ ವ್ಯಕ್ತಪಡಿಸಿದೆ.

























