
ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಸಂಬಂಧಿಸಿದ ನಿಧಿ ವಿವಾದದ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ತೀವ್ರ ಟೀಕೆ ನಡೆಸಿದ್ದು, ಅಯೋಧ್ಯೆ ಹಾಗೂ ರಾಮ ಮಂದಿರದ ಪ್ರತಿಷ್ಠೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರಕರಣದ ಸತ್ಯಾಂಶ ತಿಳಿಯಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ ಎಂದು ಘೋಷಿಸಿದರು.
ಅಯೋಧ್ಯೆಯ ಮಣಿ ರಾಮ್ ದಾಸ್ ಚಹಾವನಿಯ ಮುಖ್ಯಸ್ಥರು ಹಾಗೂ ರಾಮ ಜನ್ಮಭೂಮಿ ಟ್ರಸ್ಟ್ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಜಿ ಮಹಾರಾಜ್ ಅವರ 88ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟ್ರಸ್ಟ್ ಮನವಿಯ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದರು.
ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದವರು ಈಗ ರಾಮಭಕ್ತಿಯ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ ಎಂದು ಹೇಳಿದ ಯೋಗಿ, ಎಸ್ಐಟಿ ತನಿಖೆಯಿಂದ ಶೀಘ್ರದಲ್ಲೇ ಸತ್ಯ ಹೊರಬರಲಿದೆ. ಸಮಾಜವಾದಿ ಪಕ್ಷದ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಧಾರ್ಮಿಕ ಮೌಲ್ಯಗಳ ಬಗ್ಗೆ ಮಾತನಾಡುವವರ ನಡೆ ಮತ್ತು ಹೇಳಿಕೆಗಳ ನಡುವೆ ವ್ಯತ್ಯಾಸವಿದೆ ಎಂದು ಆರೋಪಿಸಿದರು.
ಅಯೋಧ್ಯೆಗೆ ಭಕ್ತರ ಸಂಖ್ಯೆ ಕಡಿಮೆಯಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಯೋಗಿ, ತಾವು ಭೇಟಿ ನೀಡಿದ ವೇಳೆ ರಾಮ ಮಂದಿರ ಹಾಗೂ ಹನುಮಾನ್ಗರ್ಹಿ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇದ್ದುದನ್ನು ಕಂಡಿದ್ದಾಗಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಅಯೋಧ್ಯೆ ದೊಡ್ಡ ಮಟ್ಟದ ಅಭಿವೃದ್ಧಿ ಕಂಡಿದ್ದು, ಹಿಂದಿನ ಪರಿಸ್ಥಿತಿಯಿಂದ ಈಗ ಸಂಪೂರ್ಣ ಬದಲಾಗಿದೆ ಎಂದು ಯೋಗಿ ಹೇಳಿದರು.


































