ಬಿಜೆಪಿ ಆರೋಪ ತಳ್ಳಿಹಾಕಿದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ನೀಟ್ ಪರೀಕ್ಷೆಗೆ ಕೆಲವು ವಿದ್ಯಾರ್ಥಿಗಳು ಹಾಜರಾಗಲು ಸಾಧ್ಯವಾಗಿಲ್ಲ ಎಂಬ ವರದಿಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಿಷಾದ ವ್ಯಕ್ತಪಡಿಸಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ‘ಸಂಕಲ್ಪ’ ಸಮಾವೇಶದಿಂದ ಸಂಚಾರ ದಟ್ಟಣೆ ಉಂಟಾಗಿ ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿಕೊಂಡಿದ್ದಾರೆ ಎಂಬ ಬಿಜೆಪಿಯ ಆರೋಪವನ್ನು ತಳ್ಳಿ ಹಾಕಿದ ಅವರು, ಆರ್.ಸಿ ಕಾಲೇಜು ಕೇಂದ್ರದ 720 ಅಭ್ಯರ್ಥಿಗಳಲ್ಲಿ ಕೇವಲ ಇಬ್ಬರು ಅಥವಾ ಮೂವರು ಮಾತ್ರ ಪರೀಕ್ಷೆಗೆ ಗೈರಾಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದ ಕಾರಣದಿಂದ ಈ ಪರಿಸ್ಥಿತಿ ಉಂಟಾಗಿದ್ದರೆ ವಿಷಾದವಿದ್ದು, ಬಾಧಿತ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಅಗತ್ಯ ನೆರವು ನೀಡಲು ಕಾಂಗ್ರೆಸ್ ಸಿದ್ಧವಿದೆ ಎಂದರು.
ಪದೇ ಪದೇ ಪರೀಕ್ಷೆಗಳನ್ನು ನಡೆಸುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಒತ್ತಡ ಹೆಚ್ಚಿಸಲಾಗುತ್ತಿದೆ ಎಂದು ಟೀಕಿಸಿದ ಅವರು, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಂದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ. ಕಾಂಗ್ರೆಸ್ ವಿರುದ್ಧ ಟೀಕೆ ಮಾಡುತ್ತಿರುವ ಬಿಜೆಪಿ ಈ ವಿಷಯಗಳ ಬಗ್ಗೆ ಮೌನವಾಗಿರುವುದು ಏಕೆ ಎಂದು ಪ್ರಶ್ನಿಸಿದರು.


































