ಸಾರ್ವಜನಿಕರಿಗೆ ಸಹಕರಿಸುವಂತೆ ಮನವಿ

ಬೆಂಗಳೂರು: ಭಾರತ ಚುನಾವಣಾ ಆಯೋಗದ ಸೂಚನೆಯಂತೆ ರಾಜ್ಯಾದ್ಯಂತ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ–2026 (SIR) ಕಾರ್ಯಕ್ಕೆ ಜೂನ್ 30ರಂದು ಚಾಲನೆ ದೊರೆತಿದೆ. ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಹಾಗೂ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ. ಸಾರ್ವಜನಿಕರ ದೂರುಗಳು ಮತ್ತು ಮಾಹಿತಿ ನೆರವಿಗಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶೇಷ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಕಾಂತರಾಜು ಪಿ.ಎಸ್. ತಿಳಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ಕ್ಷೇತ್ರದ ಮತದಾರರು ಈ ಸೌಲಭ್ಯ ಪಡೆಯಬಹುದು. ಅಹವಾಲುಗಳಿಗಾಗಿ ಕಚೇರಿ ವೇಳೆಯಲ್ಲಿ 080-22967200 ಸಂಖ್ಯೆಗೆ ಕರೆ ಮಾಡಬಹುದು ಅಥವಾ adeobangaloreurban@gmail.com ಗೆ ಇ-ಮೇಲ್ ಕಳುಹಿಸಬಹುದು. ಜಿಲ್ಲಾಧಿಕಾರಿಗಳ ಅಧಿಕೃತ ಸಾಮಾಜಿಕ ಜಾಲತಾಣಗಳ ಮೂಲಕವೂ ಸಂಪರ್ಕಿಸಲು ಅವಕಾಶವಿದೆ.
ಮನೆ ಭೇಟಿ ವೇಳೆ ಮತದಾರರ ಹೆಸರು, ವಿಳಾಸ ತಿದ್ದುಪಡಿ, ಹೊಸ ಮತದಾರರ ಸೇರ್ಪಡೆ ಹಾಗೂ ವಲಸೆ ಅಥವಾ ಮೃತರ ಹೆಸರು ಕೈಬಿಡುವ ಪ್ರಕ್ರಿಯೆ ನಡೆಯಲಿದೆ. ಬಿಎಲ್ಒಗಳು ಎಸ್ಐಆರ್ ಅರ್ಜಿ ನೀಡಿ ಅಗತ್ಯ ದಾಖಲೆಗಳಾದ ಗುರುತಿನ ಚೀಟಿ, ವೋಟರ್ ಐಡಿ, ಆಧಾರ್, ವಿಳಾಸ ಪುರಾವೆ ಹಾಗೂ ಭಾವಚಿತ್ರವನ್ನು ಸ್ವೀಕರಿಸಲಿದ್ದಾರೆ. ಒಂದಕ್ಕಿಂತ ಹೆಚ್ಚು ಕಡೆ ನೋಂದಣಿ ಕಂಡುಬಂದರೆ ಅಂತಹ ಹೆಸರುಗಳನ್ನು ಪಟ್ಟಿಯಿಂದ ಅಳಿಸಿಹಾಕಲಾಗುತ್ತದೆ.
ಚುನಾವಣಾ ಆಯೋಗ ಪ್ರಕಟಿಸಿದ ವೇಳಾಪಟ್ಟಿಯಂತೆ ಜುಲೈ 29ರವರೆಗೆ ಮಾಹಿತಿ ಸಂಗ್ರಹಣೆ ನಡೆಯಲಿದ್ದು, ಆಗಸ್ಟ್ 5ರಂದು ಕರಡು ಪಟ್ಟಿ ಪ್ರಕಟವಾಗಲಿದೆ. ಸೆಪ್ಟೆಂಬರ್ 4ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ. ಸಾರ್ವಜನಿಕರು ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸುವಂತೆ ಆಯೋಗವು ಜನತೆಗೆ ಮನವಿ ಮಾಡಿದೆ.


































