
ನವದೆಹಲಿ: ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಕೈಗೆತ್ತಿಕೊಳ್ಳಲು ನಿರಾಕರಿಸಿದೆ.
ಅರ್ಜಿದಾರರ ಪರ ವಕೀಲರು, ಪೊಲೀಸ್ ಕ್ರಮಕ್ಕೆ ಸಂಬಂಧಿಸಿದ ವಿಡಿಯೋ ಸಾಕ್ಷ್ಯಗಳು ತಮ್ಮ ಬಳಿ ಇದ್ದು, ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆದಿರುವುದರಿಂದ ಅರ್ಜಿಯನ್ನು ತಕ್ಷಣವೇ ವಿಚಾರಣೆಗೆ ತೆಗೆದುಕೊಳ್ಳುವಂತೆ ಮನವಿ ಮಾಡಿದರು. ವಿದ್ಯಾರ್ಥಿಗಳು ಸಂಕಷ್ಟದಲ್ಲಿರುವುದನ್ನೂ ಅವರು ನ್ಯಾಯಾಲಯದ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ “ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. ಈಗ ಯಾವುದೇ ವಿಡಿಯೋಗಳನ್ನು ನೋಡಲು ಸಮಯವಿಲ್ಲ, ನಾವು ಆಸಕ್ತಿ ಹೊಂದಿಲ್ಲ” ಎಂದು ಅವರು ಹೇಳಿದರು.
ವಕೀಲರು ಮತ್ತೆ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಹಲ್ಲೆಯ ವಿಷಯವನ್ನು ಪ್ರಸ್ತಾಪಿಸಿದರೂ, ಮುಖ್ಯ ನ್ಯಾಯಮೂರ್ತಿಗಳು ತಮ್ಮ ನಿಲುವನ್ನು ಪುನರುಚ್ಚರಿಸಿ, “ಈ ವಿಚಾರದಲ್ಲಿ ನಾವು ಯಾವುದೇ ವಿಡಿಯೋಗಳನ್ನು ನೋಡಲು ಬಯಸುವುದಿಲ್ಲ. ದಯವಿಟ್ಟು ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಬೇಡಿ” ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

















































