
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಬೆಳವಣಿಗೆಯನ್ನು ದಾಖಲಿಸಿದೆ. ಪ್ರಕರಣವನ್ನು ಮರುಪರಿಶೀಲನೆ ಮಾಡಲು ನ್ಯಾಯಾಲಯ ಸಮ್ಮತಿ ಸೂಚಿಸಿದ್ದು, ತನಿಖೆಯನ್ನು ಯಾವ ಸಂಸ್ಥೆ ಮೂಲಕ ಮತ್ತು ಯಾವ ವಿಧಾನದಲ್ಲಿ ನಡೆಸಬೇಕು ಎಂಬ ಪ್ರಶ್ನೆಗೆ ಸಂಬಂಧಿಸಿದ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.
ನ್ಯಾಯಾಲಯ, ಮರುತನಿಖೆಯ ರೂಪುರೇಷೆಗಳ ಬಗ್ಗೆ ಶೀಘ್ರದಲ್ಲೇ ಆದೇಶ ಹೊರಡಿಸುವ ನಿರೀಕ್ಷೆಯಿದ್ದು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಯ ಮೇಲ್ವಿಚಾರಣೆ ಮತ್ತು ಜವಾಬ್ದಾರಿಯ ಕುರಿತು ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡುವ ಸಾಧ್ಯತೆ ಇದೆ.
ವಿಚಾರಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದ್ದು, ಪ್ರಕರಣದ ಮರುತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲು ಸಂಪೂರ್ಣ ಸಿದ್ಧವಿದೆ ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಇನ್ನೊಂದೆಡೆ, ಸೌಜನ್ಯ ಅವರ ತಾಯಿ ಕುಸುಮಾವತಿ ಅವರು, ತನಿಖೆಯು ಪಾರದರ್ಶಕವಾಗಿ ನಡೆಯಬೇಕಾದರೆ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇರ ಮೇಲ್ವಿಚಾರಣೆಯಲ್ಲೇ ಎಸ್ಐಟಿ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ಈ ಎಲ್ಲ ವಾದ-ಪ್ರತಿವಾದಗಳನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್, ಮರುತನಿಖೆಯ ಜವಾಬ್ದಾರಿ ವಹಿಸುವ ಸಂಸ್ಥೆ ಹಾಗೂ ತನಿಖೆಯ ಸ್ವರೂಪಕ್ಕೆ ಸಂಬಂಧಿಸಿದಂತೆ ತನ್ನ ಅಂತಿಮ ಆದೇಶದಲ್ಲಿ ಸಮಗ್ರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.

















































